ಎಚ್ಎಂಟಿ ಡಿನೋಟಿಫಿಕೇಷನ್ ಪ್ರಕರಣ : ಐಎಫ್ಎಸ್ ಅಧಿಕಾರಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು
ಈಶ್ವರ್ ಬಿ. ಖಂಡ್ರೆ
ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐಎಎಸ್, ಐಎಫ್ಎಸ್ ಮತ್ತು ಇಬ್ಬರು ಹಾಲಿ ಐಎಫ್ಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಆದಾಗ್ಯೂ ಈ ಭೂಮಿ ಪರಭಾರೆ ಆಗಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು.
ಎಚ್ಎಂಟಿ ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗೆ ಶಿಫಾರಸು ಮಾಡಿದ್ದೇನೆ ಎಂದು ಅವರು ತಿಳಿಸಿದರು.
2024ರ ಸೆಪ್ಟೆಂಬರ್ 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳಿಸಿ, ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಸೂಚನೆ ನೀಡಿದ ತಿಂಗಳ ನಂತರ ಅಕ್ಟೋಬರ್ 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್.ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ ಇದು ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದರು.
ಎಚ್ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿದ್ದು, ಅಲ್ಲಿ ಇಂದಿಗೂ 280 ಎಕರೆಯಷ್ಟು ನೆಡುತೋಪು ಇದೆ. ಆದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಎಚ್ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೆ ಏಕೆ ಪತ್ರ ಬರೆಯಲಿಲ್ಲ ಎಂದು ಅವರು ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ.
ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020ರ ಜುಲೈ 15ರಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ‘1980ರ ಪೂರ್ವದಲ್ಲಿ ವಿವಿಧ /ಸರಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್ನ ಪ್ರಸ್ತಾವವನ್ನು ಸಂಪುಟದ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಆದಾಗ್ಯೂ ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ ನಾಲ್ಕು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು ಎಂದರು.
ಇದೀಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐಎಎಸ್ ಅಧಿಕಾರಿ ಮತ್ತು ಐಎಫ್ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ತಾವು ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐ.ಎ. ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಉದ್ಯಾನ ನಿರ್ಮಾಣ: ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಉತ್ತರ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣ ಮಾಡುವುದು ಸರಕಾರದ ಉದ್ದೇಶ. ಮುಂದಿನ ಪೀಳಿಗೆಗೆ ಶ್ವಾಸತಾಣ ಉಳಿಸುವುದು ತಮ್ಮ ಗುರಿಯಾಗಿದೆ. ಈ ಅಂಶವನ್ನು ಐಎ ಹಿಂಪಡೆಯಲು ಸುಪ್ರೀಂಕೋರ್ಟ್ಗೆ ಅರ್ಜಿ ಹಾಕುವ ಪೂರ್ವದಲ್ಲೇ ತಾವು ಸ್ಪಷ್ಟಪಡಿಸಿರುವೆ ಎಂದು ಅವರು ಹೇಳಿದರು.