ಸರಕಾರಿ ಶಾಲೆಗಳನ್ನು ದತ್ತು ಪಡೆಯದ ನಗರದ ಖಾಸಗಿ ಶಾಲೆಗಳ ಶುಲ್ಕಕ್ಕೆ ಮಿತಿ: ಸಿಎಂ ಡಿ.ಕೆ.ಶಿವಕುಮಾರ್

Update: 2026-07-23 16:16 IST

ಬೆಂಗಳೂರು, ಜು.23: "ನಗರ ಪ್ರದೇಶಗಳಲ್ಲಿ 50 ಸಾವಿರ ರೂ.ಗಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಈ ಶಾಲೆಗಳು ದತ್ತು ಪಡೆಯದೇ ಇದ್ದರೆ ಈ ಶಾಲೆಗಳ ಶುಲ್ಕಗಳಿಗೆ ಮಿತಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆ.ಜಿ. ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ. ಸಭಾಂಗಣದಲ್ಲಿ ಎಫ್ ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ಶಾಲೆಗಳು ಸರಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಹಣ ಹಾಕುವುದು ಬೇಡ, ಅವರು ಕೇವಲ ಬೋಧಕರನ್ನು ನಿಯೋಜಿಸಿದರೆ ಸಾಕು. ನಮ್ಮ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಸರಕಾರಿ ಶಾಲಾ ಶಿಕ್ಷಕರಿಗೆ ನಾವು ಖಾಸಗಿ ಶಾಲೆಗಳಿಗಿಂತ ಉತ್ತಮ ವೇತನ ನೀಡುತ್ತಿದ್ದೇವೆ. ನೀವೆಲ್ಲರೂ ಇದರ ಭಾಗವಾಗಬೇಕು. ನಾನು ಕೂಡ ಮೂರು ಶಾಲೆಗಳನ್ನು ನಡೆಸುತ್ತಿದ್ದೇನೆ. ನಮ್ಮ ಶಾಲೆಗಳು ಕೂಡ ಗ್ರಾಮೀಣ ಭಾಗದ ಸರಕಾರಿ ಶಾಲೆ ದತ್ತು ಪಡೆಯಬೇಕು ಎಂದು ನನ್ನ ಮಗಳಿಗೆ ತಿಳಿಸಿದ್ದೇನೆ. ಆಕೆ ಮೂರು ಶಾಲೆ ದತ್ತು ಪಡೆದಿದ್ದಾರೆ”ಎಂದು ತಿಳಿಸಿದರು.

ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ:

''ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು”ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

''ನಾವು ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಚಿವರ ಜೊತೆ ಚರ್ಚೆ ಮಾಡಿ, ಸಿಎಸ್ಆರ್ ನಿಧಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಬಳಸಲು ತೀರ್ಮಾನಿಸಿದ್ದೇವೆ. ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50 ಶೇ. ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”ಎಂದು ತಿಳಿಸಿದರು.

“ಗ್ರಾಮೀಣ ಭಾಗದ ಮಕ್ಕಳಿಗೆ ನಗರ ಪ್ರದೇಶದಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೀಗಾಗಿ ನಾವು ನೀತಿ ರೂಪಿಸುತ್ತಿದ್ದು, ಎಲ್ಲರೂ ಸಿಎಸ್ಆರ್ ನಿಧಿಯನ್ನು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಬೇಕು. ಸಿಎಸ್ಆರ್ ನಿಧಿಯಲ್ಲಿ ಶಾಲೆಗಳನ್ನು ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಬೇಕು. ನಮ್ಮ ಸರಕಾರ ರಾಜ್ಯದಲ್ಲಿ 2 ಸಾವಿರ ಜಾಗಗಳನ್ನು ಗುರುತಿಸಿದ್ದು, ಪ್ರತೀ ಕಾರ್ಪೊರೇಟ್ ಸಂಸ್ಥೆ ಈ ಜಾಗಗಳಲ್ಲಿ ಅತ್ಯುತ್ತಮ ಮೂಲ ಸೌಕರ್ಯವಿರುವ ಶಾಲೆಗಳನ್ನು ನಿರ್ಮಾಣ ಮಾಡಬೇಕು. ನೀವು ನಮಗೆ ಹಣ ನೀಡಬೇಡಿ, ನೀವೇ ಹಣ ಹಾಕಿ ಶಾಲೆ ನಿರ್ಮಿಸಿ. ಶಾಲೆಗೆ ನಿಮ್ಮ ಸಂಸ್ಥೆಯ ಹೆಸರನ್ನು ಸೇರಿಸಿ. ಟೊಯೋಟಾ ಬೆಂಗಳೂರಿನಲ್ಲಿ 7-8 ಶಾಲೆಗಳನ್ನು ನಿರ್ಮಿಸುತ್ತಿವೆ. ಟೋಯೋಟಾದವರು ಪ್ರತೀ ಶಾಲೆಗೆ 10-15 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸುತ್ತಿದ್ದಾರೆ ಉಪ ಆಯುಕ್ತರು ನಿಮಗೆ ಜಾಗ ನೀಡುತ್ತಾರೆ. ಆ ಜಾಗದಲ್ಲಿ ನೀವು ಶಾಲೆ ನಿರ್ಮಿಸಬಹುದು. ನಿಮಗೆ ಒಬ್ಬರಿಂದಲೇ ಸಂಪೂರ್ಣ ಶಾಲೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೆ, ಶಾಲೆಯ ಕೆಲವೊಂದು ಭಾಗವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇದಕ್ಕಾಗಿಯೇ ಒಂದು ವೇದಿಕೆ ರೂಪಿಸಲಾಗುವುದು” ಎಂದರು.

“ಸಿಎಸ್ಆರ್ ನಿಧಿಯನ್ನು ಮೊದಲು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಿ, ನಂತರ ಆರೋಗ್ಯ ಕ್ಷೇತ್ರದತ್ತ ಗಮನಹರಿಸಬಹುದು. ನಾವು ಈ ವಿಚಾರವಾಗಿ ನೀತಿ ರೂಪಿಸಿ, ಎಲ್ಲಾ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ಮಾಡಲಾಗುವುದು. ಸದ್ಯದಲ್ಲೇ ನಾನು ವಿವಿಧ ಕ್ಷೇತ್ರಗಳ ಉದ್ಯಮಗಳ ಜೊತೆ ಸಭೆ ಮಾಡಲಿದ್ದೇನೆ ಇದರಿಂದ ಶಿಕ್ಷಣಕ್ಕೆ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಬಹುದು. ನಮ್ಮ ಹಳ್ಳಿಯ ಮಕ್ಕಳು ಕೇವಲ ಬೆಂಗಳೂರು ಅಥವಾ ಇತರ ಭಾಗದ ಮಕ್ಕಳ ಜೊತೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ” ಎಂದರು.

“ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ಮಹಾರಾಜರ ಕಾಲದಿಂದ ಇಂದಿನವರೆಗೂ ಎಲ್ಲರನ್ನು ಒಟ್ಟಾಗಿ ಮುನ್ನಡೆಸಿಕೊಂಡು ಬಂದು ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಶಿಕ್ಷಣಕ್ಕಾಗಿ ಹಳ್ಳಿಗಳಿಂದ ನಗರಕ್ಕೆ ವಲಸೆ

“ನಾನು ಹಳ್ಳಿಯಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬಂದವನು. ನನಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ನಮ್ಮ ಪೋಷಕರು ನನ್ನನ್ನು ಬೆಂಗಳೂರಿಗೆ ಕಳುಹಿಸಿದರು. ನಾನು ಇಲ್ಲೇ ವಿದ್ಯಾರ್ಥಿಯಾಗಿದ್ದಾಗಿನಿಂದ ರಾಜಕಾರಣದಲ್ಲಿ ತೊಡಗಿಕೊಂಡು ಮತ್ತೆ ಊರಿಗೆ ವಾಪಸ್ ಹೋಗಲೇ ಇಲ್ಲ. ಇದು ಕೇವಲ ನನ್ನ ಕಥೆ ಮಾತ್ರವಲ್ಲ. ನಗರ ಪ್ರದೇಶದ ಎಲ್ಲರ ಪರಿಸ್ಥಿತಿಯಾಗಿದೆ. ಇಂದು ನಗರಗಳ ಜನಸಂಖ್ಯೆ 43%ನಷ್ಟಿದೆ. ಈ ಹಿಂದೆ 31% ಇತ್ತು. ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಇಂದು 1.40 ಕೋಟಿಯಷ್ಟಾಗಿದೆ. 1.35 ಕೋಟಿ ವಾಹನಗಳು ಬೆಂಗಳೂರು ರಸ್ತೆಗಳಲ್ಲಿವೆ. ಇಡೀ ವಿಶ್ವದಾದ್ಯಂತ ಜನ ಬೆಂಗಳೂರಿನತ್ತ ಮುಖ ಮಾಡಿದ್ದಾರೆ” ಎಂದು ತಿಳಿಸಿದರು.

ಉದ್ಯೋಗದಾತರ ಹಿತ ಕಾಯಲು ಬದ್ಧ

“ಉದ್ಯೋಗಿಗಳ ಜೊತೆಗೆ ಉದ್ಯೋಗದಾತರ ಹಿತವನ್ನು ನಾವು ಕಾಪಾಡಬೇಕು. ಉದ್ಯೋಗದಾತರು ಶಕ್ತಿಶಾಲಿಯಾಗಿದ್ದರೆ ಉದ್ಯೋಗಿಗಳು ಶಕ್ತಿಶಾಲಿಯಾಗಿರುತ್ತಾರೆ. ಉದ್ಯೋಗಿಗಳಿಗೆ ನೀಡಬೇಕಾದ ಕನಿಷ್ಠ ವೇತನಗಳನ್ನು ನಾವು ನೀಡಲೇಬೇಕು. ಜೊತೆಗೆ ಉದ್ಯೋಗದಾತರ ಮೇಲೂ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಬೇಕು. ನಿಮ್ಮ ಉದ್ಯಮ ವ್ಯಾಪಾರಕ್ಕೆ ನೆರವಾಗಿರುವುದಕ್ಕೆ ಅಗತ್ಯವಿರುವಂತೆ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಸಲು ನಾವು ಮುಂದಾಗಿದ್ದೇವೆ. ನೀವು ಬಲಿಷ್ಠವಾಗಿದ್ದರೆ, ನಾವು ಬಲಿಷ್ಠವಾಗುತ್ತೇವೆ, ನೀವು ನಿಶಕ್ತರಾದರೆ, ನಾವು ದುರ್ಬಲರಾಗುತ್ತೇವೆ. ನೀವು ಬಲಿಷ್ಠರಾಗಿ ಎಲ್ಲರೂ ಒಟ್ಟಾಗಿ ರಾಜ್ಯವನ್ನು ನಿರ್ಮಾಣ ಮಾಡೋಣ” ಎಂದು ಕರೆ ನೀಡಿದರು.

ಈಗ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ 15% ಮೀಸಲಾತಿ ನೀಡಲಾಗುತ್ತಿದ್ದು, ಸದ್ಯದಲ್ಲೇ ಈ 15% ನಲ್ಲಿ 7.5% ಅನ್ನು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡಲಾಗುವುದು'' ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News