×
Ad

ಭಯೋತ್ಪಾದನೆಯ ವಿರುದ್ಧ ಸರ್ವಪಕ್ಷ ನಿಯೋಗ : ಕರ್ನಾಟಕದ ತೇಜಸ್ವಿ ಸೂರ್ಯ, ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆ

Update: 2025-05-18 18:21 IST

ತೇಜಸ್ವಿ ಸೂರ್ಯ/ಬ್ರಿಜೇಶ್ ಚೌಟ

ಬೆಂಗಳೂರು : ಭಯೋತ್ಪಾದನೆಯ ವಿರುದ್ಧ ಜಾಗತಿಕ ಅಭಿಪ್ರಾಯ ರೂಪಿಸುವ ಮತ್ತು ಜಾಗತಿಕ ವೇದಿಕೆಗಳಲ್ಲಿ ಭಯೋತ್ಪಾದನೆ ಬಗ್ಗೆ ಭಾರತದ ರಾಜತಾಂತ್ರಿಕ ನಿಲುವು ವ್ಯಕ್ತಪಡಿಸಲು ಪ್ರಧಾನಿ ಮೋದಿ ನೇತೃತ್ವದ ಸರಕಾರ ಜಾಗತಿಕ ಸಂವಹನ ಕಾರ್ಯ ಆರಂಭಿಸಿದೆ. ಈ ಸಂಬಂಧ ನಿಯೋಗಗಳ ಭೇಟಿಯು ಮೇ 23ರಿಂದ ಜೂನ್ 6ರ ವರೆಗೆ ನಡೆಯಲಿದ್ದು, ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯೋಗದಲ್ಲಿದ್ದಾರೆ.

ಈ ಸಂಬಂಧ ರವಿವಾರ ಪ್ರಕಟಣೆ ನೀಡಿರುವ ಸಂಸದ ತೇಜಸ್ವಿ ಸೂರ್ಯ, ಯುನೈಟೆಡ್ ಕಿಂಗ್‍ಡಮ್, ಫ್ರಾನ್ಸ್ ಮತ್ತು ಜರ್ಮನಿಗೆ ತೆರಳುವ ನಿಯೋಗದಲ್ಲಿ ನಾನು ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಾಗಿದ್ದೇವೆ. ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಅಮೆರಿಕ ಮತ್ತು ಲ್ಯಾಟಿನ್ ಅಮೆರಿಕಕ್ಕೆ ತೆರಳಲಿದ್ದು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ, ಆಪರೇಶನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಭಾರತದ ಸಂದೇಶವನ್ನು ಜಾಗತಿಕ ವೇದಿಕೆಗಳಲ್ಲಿ ಪ್ರಚುರಪಡಿಸಲಿದ್ದೇವೆ ಎಂದು ಹೇಳಿದ್ದಾರೆ.

ಮೋದಿ ಸರಕಾರವು 32 ದೇಶಗಳು ಮತ್ತು ಯುರೋಪಿಯನ್ ಒಕ್ಕೂಟಕ್ಕೆ ಭೇಟಿ ನೀಡಲು ಏಳು ಸರ್ವಪಕ್ಷ ನಿಯೋಗಗಳನ್ನು ರಚಿಸಿದ್ದು, ಈ ಭೇಟಿಯು ಪ್ರಮುಖ ರಾಜತಾಂತ್ರಿಕ ಪ್ರಯತ್ನದ ಭಾಗವಾಗಿದೆ. ಪ್ರತಿತಂಡವು ನೀತಿ ಮತ್ತು ರಾಜತಾಂತ್ರಿಕ ಪರಿಣತಿಯನ್ನು ಹೊಂದಿರುವ ಸಂಸದರಿಗೆ ಬೆಂಬಲ ನೀಡಲು ನಿವೃತ್ತ ರಾಜತಾಂತ್ರಿಕರನ್ನು ಒಳಗೊಂಡಿದೆ. ಈ ನಿಯೋಗಗಳು ಭಯೋತ್ಪಾದನೆಯ ಕುರಿತು ಭಾರತದ ದೃಢ ಮತ್ತು ಏಕೀಕೃತ ನಿಲುವನ್ನು ವಿವರಿಸುವ ಮತ್ತು ಗಡಿಯಾಚೆಗಿನ ದಾಳಿಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಪುನರುಚ್ಚರಿಸುವ ಗುರಿಯನ್ನು ಹೊಂದಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

‘ಅಮೆರಿಕಕ್ಕೆ ತೆರಳಲಿರುವ ಭಾರತೀಯ ನಿಯೋಗದಲ್ಲಿ ಶಶಿ ತರೂರ್ ಅವರೊಂದಿಗೆ ನಾನೂ ಭಾಗವಹಿಸಲಿದ್ದು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಸಂದೇಶವನ್ನು ಜಗತ್ತಿಗೆ ಕೊಂಡೊಯ್ಯುವ ಮತ್ತು ಆಪರೇಶನ್ ಸಿಂಧೂರ ಯಶಸ್ವಿ ಕಾರ್ಯಾಚರಣೆಯ ಮಹತ್ವದ ಕುರಿತಾಗಿ ಭಾರತದ ನಿಲುವನ್ನು ವ್ಯಕ್ತಪಡಿಸಲು ಈ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಧನ್ಯವಾದಗಳು’ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

‘ಆಪರೇಷನ್ ಸಿಂಧೂರ್ ಮೂಲಕ ಭಾರತವು, ಪಾಕಿಸ್ತಾನ-ಬೆಂಬಲಿತ ಭಯೋತ್ಪಾದನೆಗೆ ತಕ್ಕ ಪ್ರತಿಕ್ರಿಯೆಯನ್ನು ನೀಡಿದ್ದು, ಅಮಾಯಕರ ಮೇಲಿನ ದಾಳಿಗೆ ಪಾಕಿಸ್ತಾನವು ಅಪಾರ ಬೆಲೆ ತೆತ್ತಿದೆ. ಈ ಕಾರ್ಯಾಚರಣೆಯ ಮೂಲಕ ಭಯೋತ್ಪಾದನೆಗೆ ಭಾರತದ ಶೂನ್ಯ ಸಹಿಷ್ಣುತೆಯನ್ನು ಪ್ರಚುರಪಡಿಸುವ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಪ್ರಜಾಫ್ರಭುತ್ವ ಗಟ್ಟಿಯಾಗಿ ನಿಲ್ಲಲಿದೆ ಎಂಬ ಸಂದೇಶವನ್ನು ಜಾಗತಿಕವಾಗಿ ನೀಡುವ ಉದ್ದೇಶ ಹೊಂದಿದೆ’ ಎಂದು ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News