ಕಾಲ್ತುಳಿತ ದುರಂತ: ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಜಿಲ್ಲಾಧಿಕಾರಿ ಕರೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ.4ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಸಮಾರಂಭದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಅಥವಾ ಪ್ರತ್ಯಕ್ಷವಾಗಿ ನೋಡಿದ ಸಾರ್ವಜನಿಕರು, ಮಾಧ್ಯಮದವರು ವಿಚಾರಣಾಧಿಕಾರಿಗಳ ಸಮಕ್ಷಮದಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡುವಂತೆ ವಿಚಾರಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ ಕರೆ ನೀಡಿದ್ದಾರೆ.
ರಾಜ್ಯ ಸರಕಾರದ ಆದೇಶದ ಮೇರೆಗೆ ಜಿ.ಜಗದೀಶ್, ಈ ಅಹಿತಕರ ಘಟನೆಯ ಕುರಿತು ವಿಚಾರಣೆಯನ್ನು ನಡೆಸುತ್ತಿದ್ದಾರೆ. ತಮ್ಮ ಹೇಳಿಕೆಯನ್ನು ದಾಖಲಿಸಲು ಇಚ್ಛಿಸುವವರು ಜೂ.27ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆ.ಜಿ.ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ನ್ಯಾಯಾಲಯ ಸಭಾಂಗಣದಲ್ಲಿ ತಮ್ಮ ಲಿಖಿತ ರೂಪದ ಪ್ರಮಾಣಿತ ಅಫಿಡವಿಟ್ ನ ಎರಡು ಪ್ರತಿಗಳೊಂದಿಗೆ ಖುದ್ದು ಹಾಜರಾಗಿ ಹೇಳಿಕೆಯನ್ನು ದಾಖಲಿಸಬಹುದಾಗಿದೆ ಎಂದು ವಿಚಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.