×
Ad

ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ: ಎಸ್‌ಐಟಿ ರಚನೆಗೆ ವೆಲ್ಫೇರ್ ಪಾರ್ಟಿ ಆಗ್ರಹ

Update: 2025-07-19 23:12 IST

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದು ದೇಶಕಂಡ ಅತ್ಯಂತ ಗಂಭೀರ ಪ್ರಕರಣ. ರಾಜ್ಯ ಸರಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದೇ ಎಸ್‍ಐಟಿ ರಚನೆ ಮಾಡಿ ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಧರ್ಮಸ್ಥಳದಲ್ಲಿ ಮೂರು ದಶಕಗಳಲ್ಲಿ ನೂರಾರು ಹೆಣ್ಣುಮಕ್ಕಳ ಶವಗಳನ್ನು ಹೂತುಹಾಕಿರುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಸಾಕ್ಷ್ಯ ಸಮೇತ ದೂರು ನೀಡಿದ್ದರೂ ಸರಕಾರ ತನಿಖೆ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಕೃತ್ಯಗಳ ಮಹತ್ವದ ಸಾಕ್ಷಿಯೆನಿಸುವ ವ್ಯಕ್ತಿಯೇ ಖುದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದರೂ ರಾಜ್ಯದ ಗೃಹ ಸಚಿವರು ಈವರೆಗೆ ಮೌನವಾಗಿರುವುದು ಧರ್ಮಸ್ಥಳದ ಪ್ರಭಾವಿಗಳನ್ನು ರಕ್ಷಿಸುವ ಸಂಕೇತವೇ? ಫೇಸ್ಟುಕ್ ಪೋಸ್ಟ್ ವಿಚಾರಕ್ಕೂ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧಿಸುವ ಪೊಲೀಸ್ ಇಲಾಖೆಯ ಸಕ್ರಿಯತೆ ಧರ್ಮಸ್ಥಳದ ಸರಣಿ ಕೊಲೆ ಪ್ರಕರಣಗಳಲ್ಲಿ ನಿಷ್ಕ್ರಿಯವಾಗಿರುವುದು ಏನನ್ನು ಸೂಚಿಸುತ್ತದೆ? ಎಂದು ತಾಹೇರ್ ಹುಸೇನ್ ಪ್ರಶ್ನಿಸಿದ್ದಾರೆ.

ಪ್ರಭಾವಿಗಳ ಸುಪರ್ದಿಯಲ್ಲಿ ನಡೆಯುವ ಜನಸಾಮಾನ್ಯರ ಸಾವು ನೋವುಗಳಿಗೆ ನ್ಯಾಯ ನಿರಾಕರಿಸಲಾಗುತ್ತಿದೆಯೇ? ಸರಕಾರದ ನಡೆ ಅನುಮಾನಕ್ಕೀಡು ಮಾಡಿದೆ. ಆದಷ್ಟು ಬೇಗ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News