ಗ್ರಾಪಂ ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ

Update: 2026-08-06 12:17 IST

ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶ ಹಬ್ಬದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳ ಪೂಜೆಗೆ ಉತ್ತೇಜನ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಅವರು, ಗಣೇಶನು ಪ್ರಕೃತಿಯ ಪ್ರತೀಕವಾಗಿರುವುದರಿಂದ ಜಲಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಈಗಿನಿಂದಲೇ ಪಿಒಪಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಆದೇಶಿಸಿದ್ದಾರೆ.

ಪಿಒಪಿ ಮೂರ್ತಿಗಳು ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್‌ನಿಂದ ತಯಾರಾಗಿದ್ದು, ಅವುಗಳಲ್ಲಿ ಗಂಧಕ, ಜಿಪ್ಸಮ್, ಮ್ಯಾಗ್ನೀಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿರುತ್ತವೆ. ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇಂಗಾಲ ಅಂಶಗಳಿರುವ ರಾಸಾಯನಿಕ ಬಣ್ಣಗಳನ್ನು ಬಳಸುವುದರಿಂದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇಂತಹ ಮೂರ್ತಿಗಳನ್ನು ನದಿ, ಕೆರೆ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದಾಗ ಭಾರ ಲೋಹಗಳು ನೀರಿನಲ್ಲಿ ಕರಗಿ ಜಲಚರಗಳ ಜೀವಕ್ಕೆ ಅಪಾಯ ಉಂಟುಮಾಡುವುದರ ಜೊತೆಗೆ ಜನರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತವೆ. ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಹಾಗೂ ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News