ಪೊಲೀಸ್ ಇಲಾಖೆ ಸೂಕ್ಷ್ಮತೆಯಿಂದ ಕೆಲಸ ಮಾಡುತ್ತಿದೆ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯವನ್ನು ಸ್ಲೀಪರ್ ಸೆಲ್ಗಳ ಅಡಗುತಾಣವನ್ನಾಗಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ನಮ್ಮ ಪೊಲೀಸ್ ಇಲಾಖೆ ಈ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ದಾವಣಗೆರೆಯಲ್ಲಿ ಎನ್ಐಎ ಶಂಕಿತ ಉಗ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಕುರಿತು ಶನಿವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ಸ್ಲೀಪರ್ ಸೆಲ್ಗಳು ಸಕ್ರಿಯವಾಗಿಲ್ಲ. ಅನಾವಶ್ಯಕವಾಗಿ ಜನರಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ನಮ್ಮಲ್ಲಿ ಉದ್ಯೋಗಾವಕಾಶಗಳು ಸಿಗುತ್ತವೆ, ತಮ್ಮ ಬದುಕು ಕಟ್ಟಿಕೊಳ್ಳಬಹುದು ಎಂಬ ಉದ್ದೇಶದಿಂದ ಉತ್ತರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಇಲ್ಲಿಗೆ ವಲಸೆ ಬರುತ್ತಾರೆ. ಅವರು ಯಾವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗುವುದಿಲ್ಲ. ಇಂತಹ ಯಾವುದಾದರೂ ಬೆಳವಣಿಗೆಯಾದಾಗ ನಮಗೆ ಗೊತ್ತಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಪ್ರವಾಸಿಗರ ಭದ್ರತೆಗಾಗಿ ಪೊಲೀಸ್ ಉಪ ಠಾಣೆ ತೆರೆಯುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈ ಹಿಂದೆ ಪ್ರವಾಸೋದ್ಯಮ ಸಚಿವನಾಗಿದ್ದಾಗ ಜಲಾಶಯ, ಜಲಮೂಲಗಳು, ಜಲಪಾತಗಳ ಬಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಕಾರ್ಯವಿಧಾನ ರೂಪಿಸಲಾಗಿತ್ತು ಎಂದು ತಿಳಿಸಿದರು.
ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಲು ರೀಲ್ಸ್ ಗಳು ಮಾಡುವ ಹುಚ್ಚಿನಲ್ಲಿ ಇಂತಹ ದುರಂತ ಸಂಭವಿಸುತ್ತದೆ. ನಾವು ಅಷ್ಟೇ ಅಲ್ಲ, ಜನರು ಇದಕ್ಕೆ ಜವಾಬ್ದಾರರಾಗಬೇಕು. ಜನರು ಪ್ರಕೃತಿಯ ಸೌಂದರ್ಯ ಸವಿಯಲು ಅವಕಾಶ ಇರುವಂತೆ ಅಗತ್ಯ ಭದ್ರತೆ ಒದಗಿಸುವುದು ಸರಕಾರದ ಜವಾಬ್ದಾರಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಇಲಾಖೆ ರಚನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಇಲಾಖೆ, ಸಚಿವಾಲಯ ರಚನೆ ಹಾಗೂ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿಸಿದರು.
ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದರೆ, ಸರಕಾರದ ಕೆಲಸ ಕಾರ್ಯಗಳು ಮತ್ತಷ್ಟು ಸುಲಲಿತವಾಗಿ ಸಾಗಲು ಅನುಕೂಲವಾಗುತ್ತದೆ. ಒಂದು ವಾರ ಅಥವಾ 10 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು