ಗಾಳಿ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆ ಸುಪರ್ದಿಗೆ : ರಾಮಲಿಂಗಾರೆಡ್ಡಿ
ಬೆಂಗಳೂರು : ಅವ್ಯವಹಾರ ನಡೆದ ಆರೋಪಗಳ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಸರಕಾರವೂ ಬರೋಬ್ಬರಿ 10 ದೇವಾಲಯಗಳನ್ನು ವಶಕ್ಕೆ ಪಡೆದುಕೊಂಡಿದೆ. ಇದೇ ಮಾದರಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಈಗ ಸರಕಾರ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ, ಅವ್ಯವಹಾರ ನಡೆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರಕಾರಕ್ಕೆ ಇದೆ. ಅಲ್ಲದೆ, ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿಯೂ ಕೂಡ ಈ ರೀತಿ ಅವ್ಯವಹಾರ ನಡೆದ 10 ದೇವಾಲಯಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಮಾಹಿತಿ ನೀಡಿದರು.
ದೇವಸ್ಥಾನದ ಅವ್ಯವಹಾರ ಗೊತ್ತಾಗಿ 1 ವರ್ಷ ಆಯಿತು. ಆಡಳಿತ ಮಂಡಳಿ ಎಚ್ಚೆತ್ತು ಕ್ರಮ ತೆಗೆದುಕೊಳ್ಳಬೇಕಿತ್ತು.ಇನ್ನೂ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಹೇಗೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದನ್ನು ಮಾಧ್ಯಮಗಳೇ ತೋರಿಸಿವೆ. ಹೀಗಾಗಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆಯಲಾಗಿದೆ ಎಂದು ತಿಳಿಸಿದರು.