ಯಾವ ನಿರ್ಧಾರ ಕೈಗೊಳ್ಳಲಿದ್ದಾರೆಂಬ ನಿರೀಕ್ಷೆಯಲ್ಲಿದ್ದೇನೆ : ರಾಮಲಿಂಗಾರೆಡ್ಡಿ
ಬೆಂಗಳೂರು : ‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಅವರ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ನನಗೆ ಸಿಎಂ ಕರೆ ಮಾಡಿದ್ದರು. ನಾನು ನಮ್ಮ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಖಾಸಗಿ ಹೊಟೇಲ್ನಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಇಂದು ಸುರ್ಜೇವಾಲ ಅವರನ್ನು ಭೇಟಿ ಮಾಡಿ ಎಲ್ಲ ವಿಷಯವನ್ನು ತಿಳಿಸಿದ್ದೇನೆ ಎಂದರು.
ನಿರಾಸೆ ಆಗಿದೆ: ನನ್ನ ರಾಜಕೀಯ ಜೀವನದಲ್ಲಿ ಎಂದೂ ಇಂತಹದ್ದೇ ನಿರ್ದಿಷ್ಟ ಖಾತೆ ಕೊಡಿ ಎಂದು ಯಾರನ್ನೂ ಕೇಳಿಲ್ಲ. ಆದರೆ, ಈ ಹಿಂದೆ ನನಗೆ ಕೊಟ್ಟ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ನಿರಾಸೆಯಾಗಿದೆ. ಪಕ್ಷದ ನಾಯಕರು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ರಾಜೀನಾಮೆ ಹಿಂಪಡೆಯಲು ಸುರ್ಜೇವಾಲ ಮನವಿ ಮಾಡಿದ್ದಾರೆ. ಆದರೆ, ನಾನು ಒಪ್ಪಿಗೆ ನೀಡಿಲ್ಲ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
ನಾನು ಯಾವಾಗಲೂ ತಾಳ್ಮೆ ಕಳೆದುಕೊಂಡಿಲ್ಲ, ಕಳೆದುಕೊಳ್ಳುವುದಿಲ್ಲ. ಅತ್ಯಂತ ಶಾಂತವಾಗಿಯೇ ಇದ್ದೇನೆ. ಸಿಎಂ ಮತ್ತು ಸುರ್ಜೇವಾಲ ಅವರ ತೀರ್ಮಾನದ ನಿರೀಕ್ಷೆಯಲ್ಲಿ ನಾನು ಇದ್ದೇನೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.