ಮೈಸೂರು, ಸೆ.3: ಬುಡಕಟ್ಟು ಕುಟುಂಬಗಳಿಗೆ ಸರಕಾರದಿಂದ ವಿತರಿಸುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಪೂರೈಕೆ ಒಪ್ಪಂದದ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ.ರಘುಮೂರ್ತಿ ಭರವಸೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಕಳೆದ ಆರು ತಿಂಗಳಿಂದ ಪೌಷ್ಟಿಕ ಆಹಾರದ ಕಿಟ್ ವಿತರಣೆ ಸ್ಥಗಿತಗೊಂಡಿದ್ದು, ಇದರಿಂದ ಸಾವಿರಾರು ಆದಿವಾಸಿ ಕುಟುಂಬಗಳ ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರ ಸಲ್ಲಿಸಿ ಸಚಿವರ ಗಮನಕ್ಕೆ ತಂದರು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪೌಷ್ಟಿಕ ಆಹಾರದ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಹಾಡಿಗಳಿಗೆ ಭೇಟಿ ನೀಡಿ ಆದಿವಾಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕಾಡು ಮತ್ತು ಕಾಡಂಚಿನಲ್ಲಿ ಸುಮಾರು 48 ಸಾವಿರ ಬುಡಕಟ್ಟು ಕುಟುಂಬಗಳು ವಾಸಿಸುತ್ತಿದ್ದು, ಇವರ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯ ಸರಕಾರವು ಆದಿವಾಸಿಗಳಿಗೆ 2008ರಿಂದ ಉಚಿತವಾಗಿ ಪೌಷ್ಟಿಕ ಆಹಾರದ ಕಿಟ್ ವಿತರಿಸುವ ಯೋಜನೆ ಜಾರಿಗೆ ತಂದಿದೆ.

ಅರಣ್ಯ ಉತ್ಪನ್ನಗಳನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಕಾರದ ಪೌಷ್ಟಿಕ ಆಹಾರದ ಕಿಟ್ ಸಹಕಾರಿಯಾಗಿದ್ದು, ಈ ಕಿಟ್ನಲ್ಲಿ ನೀಡುತ್ತಿದ್ದ ರಾಗಿ, ಮೊಟ್ಟೆ, ತುಪ್ಪ, ಅಡುಗೆ ಎಣ್ಣೆ ಮತ್ತು ಬೇಳೆಕಾಳು ಸೇರಿದಂತೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳು ಆದಿವಾಸಿ ಜನರ ಅಪೌಷ್ಟಿಕತೆ ನಿವಾರಣೆಗೆ ಪೂರಕವಾಗಿದ್ದವು. ಆದರೆ, ಕಳೆದ ಆರು ತಿಂಗಳಿಂದ ಈ ಪೌಷ್ಟಿಕ ಆಹಾರದ ಕಿಟ್ ವಿತರಣೆ ಸ್ಥಗಿತಗೊಂಡಿದ್ದು, ಬುಡಕಟ್ಟು ಕುಟುಂಬಗಳು ದಿನನಿತ್ಯದ ಅಗತ್ಯಗಳಿಗೆ ಪರದಾಡುವಂತಾಗಿದೆ. ಈ ಕಾರಣದಿಂದ ಕುಟುಂಬಗಳು ವಲಸೆ ಹೋಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಆದ್ದರಿಂದ ಕೂಡಲೇ ಪೌಷ್ಟಿಕ ಆಹಾರದ ಕಿಟ್ ವಿತರಿಸಬೇಕು ಎಂದು ಕೆ.ಶಿವಕುಮಾರ್ ಮನವರಿಕೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor