×
Ad

ಎಸ್‌ಟಿ ಮೀಸಲಾತಿ ಇಳಿಕೆ ದಲಿತ ಸಮುದಾಯಕ್ಕೆ ದ್ರೋಹ : ಆರ್.ಅಶೋಕ್ ಆರೋಪ

Update: 2026-05-13 14:36 IST

ಬೆಂಗಳೂರು: ಕಾಂಗ್ರೆಸ್ ಏಕಾಏಕಿ ಕುತಂತ್ರ ಹಾಗೂ ಷಡ್ಯಂತ್ರ ರೂಪಿಸಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ ಮತ್ತು ದ್ರೋಹ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಇದು ಸುಮಾರು 30 ವರ್ಷಗಳ ಹೋರಾಟದ ಪ್ರತಿಫಲವಾಗಿತ್ತು ಎಂದು ಹೇಳಿದರು.

ಮಾಧುಸ್ವಾಮಿ ವರದಿ ಹಾಗೂ ಸದಾಶಿವ ಆಯೋಗದ ಶಿಫಾರಸುಗಳನ್ನು ಪರಿಗಣಿಸಿ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರದ ಕ್ರಮದಿಂದ ಎಸ್‌ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಆರೋಪಿಸಿದರು.

“ಮೀಸಲಾತಿ ಕಡಿಮೆ ಮಾಡಲು ಸಿದ್ದರಾಮಯ್ಯನವರ ಸರ್ಕಾರವೇ ಬೇಕಿತ್ತೇ? ಇದೇನಾ ನಿಮ್ಮ ದಲಿತಪರ ನೀತಿ?” ಎಂದು ಪ್ರಶ್ನಿಸಿದ ಅವರು, ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಿಸದೇಕೆ ಎಂದು ಪ್ರಶ್ನಿಸಿದರು.

ಎಸ್‌ಟಿ ಮೀಸಲಾತಿಯನ್ನು ಶೇ.7ರಿಂದ ಶೇ.3ಕ್ಕೆ ಇಳಿಸಿರುವುದು ಸಮುದಾಯಕ್ಕೆ ಅವಮಾನವಾಗಿದೆ. “ದಲಿತರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ” ಎಂದು ಟೀಕಿಸಿದ ಅವರು, ಸರ್ಕಾರ ತಕ್ಷಣ ಈ ತೀರ್ಮಾನವನ್ನು ಸರಿಪಡಿಸಬೇಕು. ಇಲ್ಲವಾದರೆ ಹೋರಾಟ ರಾಜ್ಯಾದ್ಯಂತ ಜ್ವಾಲೆಯಾಗಿ ರೂಪುಗೊಳ್ಳಲಿದೆ ಎಂದು ಎಚ್ಚರಿಸಿದರು.

“ಎಸ್‌ಟಿ ಸಮುದಾಯದ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ಆರ್ಅಶೋಕ್ ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ನೀಡಿಲ್ಲ. ಸೂಕ್ತ ವಕೀಲರನ್ನು ನೇಮಿಸದೇ ಇರುವುದರಿಂದ ತಡೆಯಾಜ್ಞೆ ಬಂದಿದೆ ಎಂದು ಆರೋಪಿಸಿದರು.

ಛತ್ತೀಸ್‌ಗಢ ರಾಜ್ಯದಲ್ಲಿ ಎಸ್‌ಟಿಗಳಿಗೆ ಶೇ.32, ಎಸ್‌ಸಿಗಳಿಗೆ ಶೇ.10 ಹಾಗೂ ಒಬಿಸಿಗಳಿಗೆ ಶೇ.16 ಸೇರಿ ಒಟ್ಟು ಶೇ.58 ಮೀಸಲಾತಿ ನೀಡಲಾಗಿದೆ. ಕರ್ನಾಟಕದಲ್ಲಿಯೂ ಜನಸಂಖ್ಯೆ ಆಧಾರಿತ ಮೀಸಲಾತಿ ಯಾಕೆ ನೀಡಲಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ ನಾಯಕ್, ಎಸ್‍ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸದಾಸ ಕರಿಯಪ್ಪ ಅವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News