ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ತ್ರಿವರ್ಣ ಧ್ವಜ ಯಾತ್ರೆ: ವಿಜಯೇಂದ್ರ
ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ನೆನಪು ಮಾಡಿಕೊಡುವ ಉದ್ದೇಶ ಹರ್ ಘರ್ ತಿರಂಗಾ ಕಾರ್ಯಕ್ರಮದ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗ ಇರುವ ಸರಕಾರಿ ಶಾಲೆ ಬಳಿಯಿಂದ ಇಂದು ತ್ರಿವರ್ಣ ಧ್ವಜ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ರಾಜ್ಯ ಮತ್ತು ದೇಶಾದ್ಯಂತ ಹರ್ ಘರ್ ತಿರಂಗಾ ಯಾತ್ರೆಗೆ ನಾವು ಇವತ್ತು ಚಾಲನೆ ನೀಡಿದ್ದೇವೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವುದು, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಮೂಡಿಸುವ ಉದ್ದೇಶ ಇದರಲ್ಲಿದೆ ಎಂದ ಅವರು, ದುಷ್ಟ, ದೇಶ ವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯುವ ಅಗತ್ಯವಿಲ್ಲ ಎಂದರು.
ಬೆಂಗಳೂರಿನ ವಿಧಾನಸೌಧದಲ್ಲಿ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು.
ನರೇಂದ್ರ ಮೋದಿ ಎಲ್ಲರಿಗೂ ಮಾದರಿಯಾಗಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸಲು ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ನರೂ ಸೇರಿ ನಾವೆಲ್ಲರೂ ಒಂದೇ ತಾಯಿ ಮಕ್ಕಳಂತೆ ಒಟ್ಟಾಗಿ ದೇಶಾಭಿಮಾನವನ್ನು ರೂಢಿಸಬೇಕು ಎಂದು ಮನವಿ ಮಾಡಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ಮಾಜಿ ಸಚಿವ ಮತ್ತು ಶಾಸಕ ಗೋಪಾಲಯ್ಯ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರಿನ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮತ್ತು ಪ್ರಮುಖರು ಉಪಸ್ಥಿತರಿದ್ದರು.