ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (Photo: X)

ಬೆಂಗಳೂರು, ಸೆ.19: ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತವೇ ಸರಕಾರದ ಮೊದಲ ಆದ್ಯತೆಯಾಗಿದೆ. ವಿಪಕ್ಷದವರು ಪ್ರತಿಯೊಂದು ವಿಷಯವನ್ನೂ ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯ ಕುರಿತು ಸಮಗ್ರವಾಗಿ ಚರ್ಚಿಸಿ, ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರನ್ನು ಸಂಕಷ್ಟದಿಂದ ಹೊರತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಬರದ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ :

ಇಡೀ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಯಾಗಬೇಕು. ಬರ ಪರಿಹಾರಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಕೇಂದ್ರ ಸರಕಾರದ ಯಾವ ರೀತಿ ನೆರವು ಕೇಳಬೇಕು ಎಂಬುದರ ಕುರಿತು ಒಗ್ಗಟ್ಟಿನಿಂದ ಚರ್ಚಿಸಬೇಕಿದೆ. ಇದೇ ಉದ್ದೇಶದಿಂದ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಬರ ಪರಿಸ್ಥಿತಿಯ ಜೊತೆಗೆ ಕಸ್ತೂರಿ ರಂಗನ್ ವರದಿಯ ಕುರಿತೂ ಚರ್ಚೆಯಾಗಲಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ಜನರ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಸರಕಾರ ವಿರೋಧಿಸುವುದಿಲ್ಲ. ಆದರೆ ಪ್ರತಿಯೊಂದಕ್ಕೂ ಸಮಯ ಮತ್ತು ಸಂದರ್ಭವಿದ್ದು, ಎಲ್ಲ ವಿಷಯಗಳನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವುದು ಸೂಕ್ತವಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

ಕರಾವಳಿ ಅಭಿವೃದ್ಧಿಗೆ ವಿಶೇಷ ಆದ್ಯತೆ :

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ, ರಸ್ತೆ, ಸೇತುವೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಡಿಸಿಎಂ ತಿಳಿಸಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ 61 ವಿಷಯಗಳಿಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದೇವೆ. ಕರಾವಳಿ ಭಾಗದ ಜನರಿಗೆ ನೇರವಾಗಿ ಅನುಕೂಲವಾಗುವ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸರ್ಕಾರದ ಉದ್ದೇಶ. ಜನಸಮುದಾಯಕ್ಕೆ ಅನುಕೂಲ ಕಲ್ಪಿಸುವುದೇ ನಮ್ಮ ಪ್ರಥಮ ಆದ್ಯತೆ ಎಂದರು.

ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸುವುದು ಸರಕಾರದ ಬದ್ಧತೆ:

ಚುನಾವಣಾ ಪ್ರಣಾಳಿಕೆ ಸರಕಾರಕ್ಕೆ ಮೂಲಗ್ರಂಥವಿದ್ದಂತೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವುದು ನಮ್ಮ ಜವಾಬ್ದಾರಿ. ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ. ಅದೇ ಬದ್ಧತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಂದುವರಿಸಲಾಗುತ್ತಿದೆ. ಸಿದ್ದರಾಮಯ್ಯ ಅವರ ಅನುಭವ ಮತ್ತು ಅಭಿಪ್ರಾಯಗಳನ್ನು ಪಡೆದುಕೊಂಡೇ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು. ನಂತರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದವರು ಇದೇ ವೇಳೆ ತಿಳಿಸಿದರು.

72 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ :

ರಾಜ್ಯ ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದು, ಒಟ್ಟು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 900ಕ್ಕೂ ಹೆಚ್ಚು ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲಾಖೆಗಳ ಅವಶ್ಯಕತೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿಯೂ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor