ʼಜನಪ್ರತಿನಿಧಿಗಳು ಕಾನೂನು ರೂಪಿಸುವಲ್ಲೂ ಸಕ್ರಿಯ ಪಾತ್ರ ನಿರ್ವಹಿಸಬೇಕುʼ : ಉತ್ತರ ಪ್ರದೇಶ ವಿಧಾನ ಮಂಡಲದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್
ಲಕ್ನೋ : ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಆಶಯಗಳನ್ನು ಪ್ರತಿಬಿಂಬಿಸುವ ಕಾನೂನುಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅದು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುವ ಮೂಲ ಆಧಾರವಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಉತ್ತರ ಪ್ರದೇಶದ ವಿಧಾನ ಮಂಡಲದಲ್ಲಿ ಮಂಗಳವಾರ ನಡೆದ ಸ್ಪೀಕರ್ಗಳ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಧಾನ ಮಂಡಲವು ಪ್ರಜಾಪ್ರಭುತ್ವದ ಹೃದಯವಾಗಿದೆ. ಶಾಸಕರು ಮತ್ತು ಜನಪ್ರತಿನಿಧಿಗಳು ಅದರ ಪ್ರಮುಖ ಅಂಗಗಳಾಗಿದ್ದಾರೆ. ಜನರ ಆಶಯಗಳನ್ನು ಧ್ವನಿಯಾಗಿ ಪರಿವರ್ತಿಸಿ, ಸಮಾಜಕ್ಕೆ ಅಗತ್ಯವಾದ ಕಾನೂನುಗಳನ್ನು ರೂಪಿಸುವ ಮಹತ್ತರ ಹೊಣೆಗಾರಿಕೆ ಜನಪ್ರತಿನಿಧಿಗಳ ಮೇಲಿದೆ. ಆದ್ದರಿಂದ ಶಾಸಕರ ಹಾಗೂ ಜನಪ್ರತಿನಿಧಿಗಳ ಸಾಮರ್ಥ್ಯವರ್ಧನೆ ಇಂದಿನ ತುರ್ತು ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ನಡೆಯುತ್ತಿರುವ ಚರ್ಚೆಗಳು ಅತ್ಯಂತ ಸ್ವಾಗತಾರ್ಹ ಎಂದು ಯು.ಟಿ.ಖಾದರ್ ನುಡಿದರು.