ನಗರಗಳ ಮೂಲಸೌಕರ್ಯ ಅಭಿವೃದ್ಧಿ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು, ಆ.12: ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ‘ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2)’ರ ರಾಜ್ಯ ಮಟ್ಟದ ಸಮಿತಿ ಸಭೆಯು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರವಾಗಿ ಚರ್ಚಿಸಿ, ನಗರಗಳ ಸಮಗ್ರ ಅಭಿವೃದ್ಧಿ, ನಾಗರಿಕ ಸೇವೆಗಳ ಸುಧಾರಣೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು:
- ಪ್ರತಿಯೊಂದು ಮಹಾನಗರ ಪಾಲಿಕೆಯ ವಿವರಗಳು, ಸಾರ್ವಜನಿಕ ಸೇವೆಗಳು ಹಾಗೂ ಅಗತ್ಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ವಿಶೇಷ ಮೊಬೈಲ್ ಆ್ಯಪ್/ಸಾಫ್ಟ್ವೇರ್ ಅಭಿವೃದ್ಧಿಪಡಿಸಲು ಸೂಚಿಸಲಾಯಿತು.
- ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಉತ್ಪತ್ತಿಯಾಗುವ ಕಸದ ಪ್ರಮಾಣವನ್ನು ಆಧರಿಸಿ, ಅದಕ್ಕಿಂತ ಹೆಚ್ಚಿನ ಸಾಮರ್ಥ್ಯ ಹೊಂದಿರುವ ವೇಸ್ಟ್ ಪ್ರೊಸೆಸಿಂಗ್ ಯೂನಿಟ್ಗಳನ್ನು (Waste Processing Units) ಸ್ಥಾಪಿಸಲು ನಿರ್ದೇಶನ ನೀಡಲಾಯಿತು.
- ತ್ಯಾಜ್ಯವನ್ನು ಮೂಲದಲ್ಲಿಯೇ ವೈಜ್ಞಾನಿಕವಾಗಿ ವಿಂಗಡಿಸಿ ಸಂಸ್ಕರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸೆಗ್ರಿಗೇಟಿಂಗ್ ಯಂತ್ರಗಳನ್ನು (Segregating Machines) ಖರೀದಿಸಲು ಆಡಳಿತಾತ್ಮಕ ಸೂಚನೆ ನೀಡಲಾಯಿತು.
- ಹಾಸನ ಮಹಾನಗರ ಪಾಲಿಕೆಯ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗಾಗಿ 185 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು.
- ತುಮಕೂರು ಮಹಾನಗರ ಪಾಲಿಕೆಗೆ ಹಂಚಿಕೆಯಾಗಿರುವ ಅನುದಾನದಲ್ಲಿ ಆರು ಕೋಟಿ ರೂ. ಮೊತ್ತದ ಬದಲಿ ಕಾಮಗಾರಿಗಳು (ನೀರು ಸರಬರಾಜು ಸರಬರಾಜು ವ್ಯವಸ್ಥೆಯ ಸುಧಾರಣೆಗಾಗಿ ಬಿ ಎಂ ಪಾಳ್ಯ ಮತ್ತು ಶೆಟ್ಟಿಹಳ್ಳಿಯಲ್ಲಿ ರೂ ಮೇಲ್ಮಟ್ಟದ ಜಲಸಂಗ್ರಾಹರಗಳ (OHT) ನಿರ್ಮಾಣ ಕಾಮಗಾರಿ, ಪಂಪಿಂಗ್ ಮೆಷಿನರಿಗಳು, ಹಾಗೂ ಏರು ಕೊಳವೆ ಮಾರ್ಗ ಅಳವಡಿಸುವ ಕಾಮಗಾರಿ) ಕ್ರಿಯಾಯೋಜನೆಗೆ ಸಮ್ಮತಿ ಸೂಚಿಸಲಾಯಿತು.
ನಗರಗಳ ಬೆಳವಣಿಗೆಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಬಲಪಡಿಸುವುದು, ನಾಗರಿಕರಿಗೆ ತ್ವರಿತ ಹಾಗೂ ಪರಿಣಾಮಕಾರಿ ಸೇವೆಗಳನ್ನು ಒದಗಿಸುವುದು ಮತ್ತು ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ಹಾಗೂ ಸುಸ್ಥಿರಗೊಳಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಹಾಗೂ ಅನುಷ್ಠಾನದ ಮೇಲೆ ವಿಶೇಷ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪಿ.ಎನ್. ರವೀಂದ್ರ, ಜಂಟಿ ನಿರ್ದೇಶಕಿ ತುಷಾರಾಮಣಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.