Chikodi | ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು
ಬೆಳಗಾವಿ : ಚಿಕ್ಕೋಡಿ ಪಟ್ಟಣದ ಪಿಯು ಕಾಲೇಜೊಂದರ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲ್ಲೂಕಿನ ಬಂಬಲವಾಡ ಗ್ರಾಮದ ನಿವಾಸಿ ಕರೆಪ್ಪ ಮಾಳಿಂಗೆ ಅವರ ಪುತ್ರಿ ಭೂಮಿಕಾ ಕರೆಪ್ಪ ಮಾಳಿಂಗೆ (17) ಮೃತ ವಿದ್ಯಾರ್ಥಿನಿ. ಭೂಮಿಕಾ ಶನಿವಾರ ಕಾಲೇಜಿಗೆ ಹೋಗಿ ತನ್ನ ಅಭ್ಯಾಸವನ್ನು ಪೂರ್ಣಗೊಳಿಸಿ ಮನೆಗೆ ಬಂದ ಸಂದರ್ಭದಲ್ಲಿ ಹಠಾತ್ ಆಗಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ವೈದ್ಯರು ಅವರನ್ನು ಪರೀಕ್ಷಿಸಿ ಮೃತಪಟ್ಟಿದ್ದಾಗಿ ಘೋಷಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಈ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿನಿ ಭೂಮಿಕಾ ಅವರ ಅಗಲಿಕೆಯಿಂದ ಸಹಪಾಠಿಗಳು ಮತ್ತು ಶಿಕ್ಷಕರು ದುಃಖ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.