×
Ad

ವಿಜಯೇಂದ್ರ ಕಲೆಕ್ಷನ್ ಕಿಂಗ್: ಡಿ.ಕೆ.ಶಿವಕುಮಾರ್ ಆರೋಪ

"ಅವರು ತಪ್ಪಿಸಿಕೊಂಡು ಓಡಾಡದೆ ಅಸೆಂಬ್ಲಿಯಲ್ಲಿ ಮಾತನಾಡಲಿ''

Update: 2025-12-18 13:48 IST

ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.18: "ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ಬಿ.ವೈ.ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು" ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಖಜಾನೆ ಖಾಲಿ ಮಾಡಿ ಹೈಕಮಾಂಡ್ ಅನ್ನು ತೃಪ್ತಿಪಡಿಸಲಾಗುತ್ತಿದೆ, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎನ್ನುವ ವಿಜಯೇಂದ್ರರ ಆರೋಪದ ಬಗ್ಗೆ ಕೇಳಿದಾಗ, "ಯಾವ ಖಜಾನೆ ಖಾಲಿಯಾಗಿದೆ? ಕಲೆಕ್ಷನ್, ಅವರ ಅಕೌಂಟ್ ಗಳು, ವಹಿವಾಟುಗಳನ್ನು ಬಿಚ್ಚಿಡಬೇಕೆ?" ಎಂದರು.

ತಪ್ಪಿಸಿಕೊಂಡು ಎಲ್ಲೋ ಹೋಗದೆ ವಿಧಾನಸಭೆಯಲ್ಲಿ ಮಾತನಾಡಲಿ

"ಅವರು ವಿಧಾನಸಭೆಯಲ್ಲಿ ಮಾತನಾಡಿದರೆ ಏನೇನು ಮಾತನಾಡಬೇಕು ಎಂದು ನನಗೂ ಗೊತ್ತಿದೆ. ಪಕ್ಷದ ಅಧ್ಯಕ್ಷರಾಗಿ ಇತಿಮಿತಿಯಿಂದ ಮಾತನಾಡಲಿ. ಮೊದಲು ವಿಧಾನಸಭೆಗೆ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಇರುವುದಲ್ಲ. ಇಲ್ಲಿ ಬಂದು ಮಾತನಾಡಲಿ. ವಿಜಯೇಂದ್ರರಿಗೆ ಅನುಭವವಿಲ್ಲ. ಯಾವ ಖಜಾನೆ ಖಾಲಿಯಾಗಿದೆ?" ಎಂದು ಕುಟುಕಿದರು.

ರೈತರ ಪರವಾಗಿ ನಿರ್ಧಾರ

ಅಧಿವೇಶನ ಶುಕ್ರವಾರ ಮುಕ್ತಾಯವಾಗಲಿದೆ ಎಂದು ಕೇಳಿದಾಗ, "ಸರಕಾರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಹೊರೆಯಾಗುತ್ತಿದ್ದರು ನಮ್ಮ ಸರಕಾರ ರೈತರ ಪರವಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಕಬ್ಬು, ಮೆಕ್ಕೆಜೋಳದ ಬೆಲೆಗಳ ಬಗ್ಗೆ ಇದ್ದ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ. ಸರಕಾರ ರೈತಪರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ರೈತರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

"ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಉತ್ತರ ಕರ್ನಾಟಕದ ವಿಚಾರವಾಗಿ ನಡೆದಿರುವ ಚರ್ಚೆಗಳಿಗೆ ಉತ್ತರ ನೀಡುತ್ತಾರೆ. ಈ ಭಾಗದ ನೀರಾವರಿ ಯೋಜನೆಗಳಾದ ಯುಕೆಪಿ, ಮಹದಾಯಿ ವಿಚಾರಗಳ ಬಗ್ಗೆ ಅವಕಾಶ ಸಿಕ್ಕರೆ ಉತ್ತರಿಸುತ್ತೇನೆ" ಎಂದರು.

ಸಚಿವರು ತಪ್ಪು ಮಾಹಿತಿ ನೀಡಿಲ್ಲ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ವಿಚಾರವಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, "ಕಳೆದ 24 ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ಈ ರಾಜ್ಯದ ಮಹಿಳೆಯರಿಗೆ ನೀಡಿದ್ದೇವೆ. ಅವರು ಯಾವ ತಪ್ಪು ಮಾಹಿತಿ ನೀಡಿದ್ದಾರೆ? ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ಅದನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಇದರಲ್ಲಿ ಯಾವುದೇ ತಪ್ಪು ಮಾಹಿತಿಯಿಲ್ಲ. ನಾವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುತ್ತಿರುವ ವಿಚಾರ ಚರ್ಚೆ ತೆಗೆದುಕೊಳ್ಳುತ್ತೇವೆ ಎಂದು ಪ್ರತಿಪಕ್ಷಗಳು ದಾರಿ ತಪ್ಪಿಸಲು ಈ ವಿಚಾರ ಎತ್ತುಕೊಂಡಿದ್ದಾರೆ" ಎಂದರು.

"ಕೇಂದ್ರ ಸರಕಾರ ಏಕೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡಿಲ್ಲ. ನರೇಗಾ ಅನುದಾನವನ್ನೂ ಇದುವರೆಗೂ ನೀಡಿಲ್ಲ. ಜಲಜೀವನ ಮಿಷನ್ ಹಣವನ್ನೂ ನೀಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನಗಳು, ಜಿಎಸ್ ಟಿ ಪರಿಹಾರ ಸಿಕ್ಕಿಲ್ಲ. ಈಗ ಇವರು ಗೃಹಲಕ್ಷ್ಮಿ ಹಣದ ಬಗ್ಗೆ ಮಾತನಾಡುತ್ತಿದ್ದಾರೆ" ಎಂದರು.

"ಬಿಜೆಪಿಯವರು ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ" ಎಂದು ಹೇಳಿದರು.

"ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ದಿಲ್ಲಿ ಪೊಲೀಸರು ಹಾಕಿರುವ ಎಫ್ ಐಆರ್ ಇನ್ನೂ ಇದೆ. ಅದನ್ನು ಹಿಂಪಡೆದರೆ ಉತ್ತಮ. ಈ ಮೂಲಕ ನಮಗೆ ಹಾಗೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರಿಗೆ ಕಿರುಕುಳ ನೀಡುತ್ತಿದ್ದಾರೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News