×
Ad

ಬಳ್ಳಾರಿ: 10 ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ

Update: 2025-08-12 20:59 IST

ಸಾಂದರ್ಭಿಕ ಚಿತ್ರ (credit: Grook)

ಬಳ್ಳಾರಿ: ನಗರದ ಅನಂತಪುರ ರಸ್ತೆಯ ವಡ್ಡರಬಂಡೆ ಮತ್ತು ರೂಪನಗುಡಿ ರಸ್ತೆಯ ವಿವಿಧ ಸ್ಥಳಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಪೋರ್ಸ್ ಸಮಿತಿಯು ದಾಳಿ ನಡೆಸಿ, 10 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.

ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿ ಪಡೆದುಕೊಂಡು ಎಲ್ಲಾ ಮಕ್ಕಳನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಎಲ್ಲಾ ಉದ್ದಿಮೆಗಳ ಮಾಲಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಇವರ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.

ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕ ರಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಕ್ಷೇತ್ರ ಸಮನ್ವಯ ಅಧಿಕಾರಿ ಮಲ್ಲಪ್ಪ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸೈಯದ್ ಬಾಷಾ, ಪೋಲಿಸ್ ಇಲಾಖೆಯ ಶೆಹನಾಜ್ ಮತ್ತು ಶಫೀಯುಲ್ಲಾ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಸುಶೀಲಾ, ರೀಚ್ ಸಂಸ್ಥೆಯ ಸಂಯೋಜಕಿ ಲಕ್ಷ್ಮೀ, ರೀಡ್ಸ್ ಸಂಸ್ಥೆಯ ಜ್ಞಾನೇಶ್ವರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News