Ballari | ನಿಡುಗುರ್ತಿ ಚಿಕ್ಕ ಕೆರೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಆರೋಪ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Update: 2026-07-28 18:36 IST

ಸಂಡೂರು/ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡುಗುರ್ತಿ ಗ್ರಾಮದ ಚಿಕ್ಕ ಕೆರೆಯಲ್ಲಿ ಕಳೆದ ಸುಮಾರು ಒಂದು ತಿಂಗಳಿನಿಂದ ಅಕ್ರಮ ಮರಳು ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅಕ್ರಮ ದಂಧೆನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಾಪುರ ಹಾಗೂ ಕೊಂಡಾಪುರ ಗ್ರಾಮಗಳಿಗೆ ಸೇರಿದ ಕೆಲವು ಟ್ರ್ಯಾಕ್ಟರ್‌ಗಳ ಮೂಲಕ ಪ್ರತಿನಿತ್ಯ ಕೆರೆಯಿಂದ ಅಕ್ರಮವಾಗಿ ಮರಳನ್ನು ಸಾಗಿಸಲಾಗುತ್ತಿದೆ. ಪರಿಸರಕ್ಕೆ ಹಾನಿಯುಂಟು ಮಾಡುವ ಈ ಚಟುವಟಿಕೆ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ವಿಷಯ ತಂದಿದ್ದರೂ, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೇವಲ ಎಚ್ಚರಿಕೆ ನೀಡಿ ಹಿಂದಿರುಗಿದ್ದಾರೆ ಎನ್ನಲಾಗಿದೆ. ಆದರೆ, ಯಾವುದೇ ಕಾನೂನು ಕ್ರಮ ಅಥವಾ ವಾಹನಗಳನ್ನು ವಶಪಡಿಸಿಕೊಳ್ಳುವಂತಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಕಾರಣ ಅಕ್ರಮ ಮರಳು ಸಾಗಾಣಿಕೆ ಮತ್ತೆ ಮತ್ತೆ ಮುಂದುವರಿಯುತ್ತಿದೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಸ್ಥಳೀಯ ಕರ ವಸೂಲಿಗಾರರ ವಿರುದ್ಧವೂ ಕೆಲವು ಗ್ರಾಮಸ್ಥರು ಆರೋಪಗಳನ್ನು ಮಾಡಿದ್ದು, ಗ್ರಾಮದ ಕೆಲವರ ಒತ್ತಡಕ್ಕೆ ಮಣಿದು ಟ್ರ್ಯಾಕ್ಟರ್ ಮಾಲೀಕರಿಗೆ ಪರೋಕ್ಷವಾಗಿ ಸಹಕಾರ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇದೆ ಎಂದು ಅಧಿಕಾರಿಗಳು ಹೇಳುತ್ತಿರುವುದನ್ನು ಉಲ್ಲೇಖಿಸಿರುವ ಗ್ರಾಮಸ್ಥರು, ಅಕ್ರಮ ಮರಳು ಸಾಗಾಣಿಕೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನುಬದ್ಧವಾಗಿ ದಂಡ ವಿಧಿಸಿ ಆ ಮೊತ್ತವನ್ನು ಗ್ರಾಮ ಅಭಿವೃದ್ಧಿಗೆ ಬಳಸಿದ್ದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ ಕೆರೆಗಳ ಪರಿಸರ ಸಮತೋಲನ ಹದಗೆಡುವುದರ ಜೊತೆಗೆ ಭೂಗರ್ಭ ಜಲಮಟ್ಟದ ಮೇಲೂ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಪರಿಸರ ಪ್ರಜ್ಞೆಯುಳ್ಳ ನಾಗರಿಕರು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ಅಕ್ರಮ ಮರಳು ಸಾಗಾಣಿಕೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಸಿ, ನಿಡುಗುರ್ತಿ ಚಿಕ್ಕ ಕೆರೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News