×
Ad

Ballari | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.9ರಂದು ಬೆಂಗಳೂರು ಚಲೋ : ಆರ್.ಎಸ್.ಬಸವರಾಜ

Update: 2026-07-01 20:09 IST

ಬಳ್ಳಾರಿ/ಕಂಪ್ಲಿ, ಜು.1: ಬೆಲೆ ಏರಿಕೆಗೆ ಅನುಗುಣವಾಗಿ ಹೊಸದಾಗಿ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘವು ಜುಲೈ 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ ತಿಳಿಸಿದ್ದಾರೆ.

ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಆವರಣದಲ್ಲಿ ಬುಧವಾರ ನಡೆದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಇತ್ತೀಚೆಗೆ ವೇತನದಲ್ಲಿ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಆದರೆ ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಹೊಸ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರರು, ಗುಮಾಸ್ತರು, ಕ್ಲರ್ಕ್‌ಗಳು, ಡಿಇಒಗಳು, ನೀರಗಂಟಿಗಳು, ವಾಟರ್‌ಮನ್, ಪಂಪ್ ಆಪರೇಟರ್‌ಗಳು, ಜವಾನರು, ಸ್ವಚ್ಛತಾ ಸಿಬ್ಬಂದಿ ಹಾಗೂ ಒಳಚರಂಡಿ ಸ್ವಚ್ಛತಾ ಸಿಬ್ಬಂದಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ಹಾಗೂ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಸೇವಾ ಹಿರಿತನ ಭತ್ಯೆ ಹೆಚ್ಚಳ, ಪಿಂಚಣಿ ಸೌಲಭ್ಯ, ಪ್ರತಿ ಪಂಚಾಯಿತಿಗೆ ಒಬ್ಬ ಎಸ್‌ಡಿಎ ಹಾಗೂ ಎರಡನೇ ಡಿಇಒ ನೇಮಕ, ಆರೋಗ್ಯ ವಿಮೆ ಜಾರಿ, ಸ್ವಚ್ಛ ವಾಹಿನಿಯರ ಒಡಂಬಡಿಕೆ ರದ್ದುಪಡಿಸಿ ತರಬೇತಿ ಪಡೆದ ಎಲ್ಲರಿಗೂ ಕೆಲಸ ಮತ್ತು 7,500 ರೂ. ಗೌರವಧನ, ಸಿಂಗಲ್ ಚಾಲಕರಿಗೆ 15 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಜುಲೈ 9ರಂದು ನಡೆಯುವ ‘ಬೆಂಗಳೂರು ಚಲೋ’ ಪ್ರತಿಭಟನೆಯಲ್ಲಿ ಕಂಪ್ಲಿ ತಾಲೂಕು ಸೇರಿದಂತೆ ಜಿಲ್ಲೆಯ 500ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಸಂಘದ ರಾಜ್ಯ ಸಹ ಕಾರ್ಯದರ್ಶಿ ನೆಲ್ಲುಡಿ ರಾಜಸಾಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರಸೇನರೆಡ್ಡಿ, ತಾಲೂಕು ಅಧ್ಯಕ್ಷ ಜಡೆಪ್ಪಸ್ವಾಮಿ, ಉಪಾಧ್ಯಕ್ಷ ಎಚ್.ಗಾದಿಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಚಾಂದ್‌ಬಾಷಾ, ಖಜಾಂಚಿ ಚಂದ್ರಶೇಖರ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News