Ballari | ಕಂಪ್ಲಿಯಲ್ಲಿ ಸಿವಿಲ್, ಜೆಎಂಎಫ್ಸಿ ನ್ಯಾಯಾಲಯ ಕಾರ್ಯಾರಂಭ
ಕಂಪ್ಲಿ (ಬಳ್ಳಾರಿ): ನ್ಯಾಯಾಂಗ ವ್ಯವಸ್ಥೆಯು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಮೂಲಕ ಸಮಾನತೆ ಹಾಗೂ ಸ್ವಾತಂತ್ರ್ಯದ ಹಕ್ಕು ದೊರೆತಿದೆ ಎಂದು ಬಳ್ಳಾರಿಯ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಂಪ್ಲಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಸಿದ್ಧಲಿಂಗಯ್ಯ ಬಿ. ಗಂಗಾಧರ್ ಮಠ ಹೇಳಿದರು.
ಪಟ್ಟಣದಲ್ಲಿ ಹೊಸದಾಗಿ ಆರಂಭಗೊಂಡಿರುವ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಶುಕ್ರವಾರ ವಿದ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು.
ಕಕ್ಷಿದಾರರಿಗೆ ತ್ವರಿತ ಮತ್ತು ಪರಿಣಾಮಕಾರಿ ನ್ಯಾಯ ಒದಗಿಸುವುದು ನ್ಯಾಯಾಲಯಗಳ ಪ್ರಮುಖ ಜವಾಬ್ದಾರಿಯಾಗಿದೆ. ನ್ಯಾಯಾಲಯದ ಕಾರ್ಯಚಟುವಟಿಕೆಗಳು ಆರಂಭಗೊಂಡಿದ್ದು, ಪ್ರಸ್ತುತ ವಾರದಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ನ್ಯಾಯಾಂಗ ಕಾರ್ಯಕಲಾಪಗಳು ನಡೆಯಲಿವೆ ಎಂದು ತಿಳಿಸಿದರು.
ಬಳಿಕ ನ್ಯಾಯಾಧೀಶರನ್ನು ಸನ್ಮಾನಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.