Ballari | ಮಳೆಯ ಕೊರತೆ ನೀಗಿಸಲು ಜಲಮೂಲಗಳ ಅಭಿವೃದ್ಧಿಗೆ ಒತ್ತು: ಮಡಗಿನ ಬಸಪ್ಪ

Update: 2026-08-18 20:09 IST

ಸಂಡೂರು/ಬಳ್ಳಾರಿ: ಪ್ರಸಕ್ತ ಸಾಲಿನಲ್ಲಿ ಮಳೆಯ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮುಂದಿನ ದಿನಗಳಲ್ಲಿ ನೀರಿನ ಕೊರತೆ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಡೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಹೇಳಿದರು.

ಮಂಗಳವಾರ ಸಂಡೂರು ತಾಲೂಕಿನ ಜಿ.ಎಲ್.ಹಳ್ಳಿ, ಯರ್ರಯ್ಯನಹಳ್ಳಿ ಹಾಗೂ ಬೊಮ್ಮಗಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಜಿ.ಎಲ್.ಹಳ್ಳಿ ಗ್ರಾಮದ ಸಮೀಪ ವಿಬಿ-ಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿದ್ದ ಸಣ್ಣ ಕುಂಟೆ ಪುನಶ್ಚೇತನ ಕಾಮಗಾರಿಯನ್ನು ವೀಕ್ಷಿಸಿದರು. ಈ ವೇಳೆ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ವಿಬಿ-ಜಿ ರಾಮ್‌ಜಿ ಯೋಜನೆಯ ಉದ್ದೇಶ, ಅನುಷ್ಠಾನ ಕ್ರಮ ಹಾಗೂ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದರಿಂದ ಮಳೆನೀರು ಸಂಗ್ರಹವಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

ಜಲಮೂಲಗಳ ಅಭಿವೃದ್ಧಿಗೆ ಆದ್ಯತೆ :

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸಣ್ಣ ಕೆರೆ, ಕುಂಟೆ, ಹಳ್ಳ-ಕೊಳ್ಳಗಳ ಪುನಶ್ಚೇತನ ಸೇರಿದಂತೆ ಜಲಮೂಲಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನೀರಿನ ಕೊರತೆಯನ್ನು ತಗ್ಗಿಸಲು ಸಾಧ್ಯವಾಗಲಿದೆ ಎಂದು ಮಡಗಿನ ಬಸಪ್ಪ ಹೇಳಿದರು.

ವೈಯಕ್ತಿಕ ಕಾಮಗಾರಿಗಳಿಗೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮೀಣ ಕುಟುಂಬಗಳು ಆರ್ಥಿಕವಾಗಿ ಸದೃಢರಾಗಲು ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗುಳೆ ತಪ್ಪಿಸಲು ನಿರಂತರ ಉದ್ಯೋಗ :

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಬೇರೆಡೆಗೆ ಗುಳೆ ಹೋಗುವುದನ್ನು ತಪ್ಪಿಸಲು ನಿರಂತರವಾಗಿ ಕೆಲಸ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಅರ್ಹ ಕುಟುಂಬಗಳಿಗೆ ಒಂದು ಆರ್ಥಿಕ ವರ್ಷದಲ್ಲಿ ಗರಿಷ್ಠ 125 ದಿನಗಳ ಉದ್ಯೋಗ ಒದಗಿಸಲಾಗುತ್ತದೆ. ಪ್ರಸ್ತುತ ದಿನಕ್ಕೆ 382 ರೂ. ಕೂಲಿ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಮಗಾರಿ ಸ್ಥಳಗಳಲ್ಲಿ ನಿಗದಿತ ಅಳತೆ ಮತ್ತು ಮಾನದಂಡಗಳಿಗೆ ಅನುಗುಣವಾಗಿ ಗುಣಮಟ್ಟದ ಕೆಲಸ ನಿರ್ವಹಿಸಬೇಕು. ಕಾರ್ಮಿಕರು ಯೋಜನೆಯ ನಿಯಮಗಳು ಹಾಗೂ ತಮ್ಮ ಹಕ್ಕುಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ವಸಂತ್ ರಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾಪಣ್ಣ, ಕಾರ್ಯದರ್ಶಿ ಸದಾಶಿವಪ್ಪ ತೆಗ್ಗಿ, ಡಾಟಾ ಎಂಟ್ರಿ ಆಪರೇಟರ್, ಬಿಎಫ್‌ಟಿ ಹಾಗೂ ಗ್ರಾಮ ಕಾಯಕ ಮಿತ್ರರು ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News