×
Ad

Ballari | ಜನಪದ ಸಾಹಿತ್ಯ ಜನರ ಬದುಕಿನ ಕನ್ನಡಿಯಾಗಿದೆ: ಬಸವರಾಜ ಬಣಕಾರ

Update: 2026-06-10 17:22 IST

ಸಂಡೂರು/ಬಳ್ಳಾರಿ: ಜನರ ಬದುಕಿನ ಅನುಭವ, ಕಷ್ಟ-ಸುಖ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಸಾಹಿತ್ಯವೇ ಜನಪದ ಸಾಹಿತ್ಯವಾಗಿದ್ದು, ಅದು ಸಾಮಾನ್ಯ ಜನರ ಬದುಕಿನ ಕನ್ನಡಿಯಾಗಿದೆ ಎಂದು ಕರ್ನಾಟಕ ಜನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಬಸವರಾಜ ಬಣಕಾರ ಅಭಿಪ್ರಾಯಪಟ್ಟರು.

ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ (ರಿ.) ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಹಳ್ಳಿಯ ಜಾನಪದ ಗೋಷ್ಠಿ ಮತ್ತು ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಜನಪದ ಸಾಹಿತ್ಯವು ಜನರ ಬಾಯಿಂದ ಬಾಯಿಗೆ ಹರಿದು ಬಂದ ಅಮೂಲ್ಯ ಪರಂಪರೆಯಾಗಿದ್ದು, ಗ್ರಾಮೀಣ ಮಹಿಳೆಯರು ಹಾಗೂ ರೈತರು ತಮ್ಮ ಬದುಕಿನ ಅನುಭವಗಳನ್ನು ಹಾಡು, ಗೀಗೀ ಪದ, ಸೋಬಾನೆ ಪದ, ಗಾದೆ, ಒಗಟು ಹಾಗೂ ಕಥೆಗಳ ರೂಪದಲ್ಲಿ ಅಭಿವ್ಯಕ್ತಗೊಳಿಸಿ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

“ಶಿಷ್ಟ ಸಾಹಿತ್ಯಕ್ಕೆ ಜನಪದ ಸಾಹಿತ್ಯವೇ ಮೂಲಬೇರು. ‘ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು’ ಎಂಬಂತಹ ಜನಪದ ಗೀತೆಗಳ ಮೂಲಕ ಗ್ರಾಮೀಣ ಮಹಿಳೆಯರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸಿದ್ದಾರೆ. ದೇಶಭಕ್ತಿ, ಶಾಂತಿ, ನೈತಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಜನಪದ ಸಾಹಿತ್ಯ ಸಮಾಜಕ್ಕೆ ಬೋಧಿಸಿದೆ” ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಗ್ರಾಮೀಣ ಪ್ರದೇಶಗಳ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜನರು ತಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಕರೆ ನೀಡಿದರು.

ಗ್ರಾಮದ ಮುಖಂಡ ಎಂ. ತಿರುಮಲ ಮಾತನಾಡಿ, ಜನಪದ ಕಲೆಗಳ ಉಳಿವಿಗೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಹಿಂದೆ ತಾಯಂದಿರು ಮಕ್ಕಳಿಗೆ ಹಾಡು ಮತ್ತು ಕಥೆಗಳ ಮೂಲಕ ಸಂಸ್ಕಾರ ನೀಡುತ್ತಿದ್ದರು. ಆ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಜನಪದ ಕಲಾತಂಡಗಳಿಂದ ಸೋಬಾನೆ ಪದ, ಭಜನಾ ಗಾಯನ, ಡೊಳ್ಳು ವಾದನ ಹಾಗೂ ತೊಗಲು ಗೊಂಬೆಯಾಟ ಪ್ರದರ್ಶನಗಳು ನಡೆದವು. ಬಳ್ಳಾರಿಯ ಲಕ್ಷ್ಮೀದೇವಿ ಮತ್ತು ತಂಡದ ತೊಗಲು ಗೊಂಬೆಯಾಟ ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

ಶ್ರೀ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ಅಧ್ಯಕ್ಷ ತಿಪ್ಪೇಸ್ವಾಮಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವಿವಿಧ ಗಣ್ಯರು, ಕಲಾವಿದರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News