Ballari | ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ: ತಹಶೀಲ್ದಾರ್ ಜೂಗಲ್ ಮಂಜುನಾಯಕ
ಬಳ್ಳಾರಿ/ಕಂಪ್ಲಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೊಂದಿಗೆ ಸರ್ವತೋಮುಖ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ರೈನ್ಬೋ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಎರಡು ದಿನಗಳ ಕಂಪ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಆಧುನಿಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದರೂ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಉತ್ತಮ ಕ್ರೀಡಾಪಟುಗಳಾಗುವುದರೊಂದಿಗೆ ಉನ್ನತ ಶಿಕ್ಷಣ ಪಡೆದು ಉತ್ತಮ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.
ರೈನ್ಬೋ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಕೆ.ಎಸ್. ಚಾಂದ್ಬಾಷಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ನಿರ್ಣಾಯಕರ ತೀರ್ಪು ನ್ಯಾಯಯುತವಾಗಿರುವುದು ಕ್ರೀಡೆಯ ನಿಜವಾದ ಮೌಲ್ಯ ಹಾಗೂ ಕ್ರೀಡಾಸ್ಫೂರ್ತಿ ಕಾಪಾಡಲು ಅತ್ಯಂತ ಮುಖ್ಯವಾಗಿದೆ. ಸೋಲು-ಗೆಲುವಿಗಿಂತ ಕ್ರೀಡಾಮನೋಭಾವಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಸಹಕಾರಿಯಾಗುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರೈನ್ಬೋ ಕಾಲೇಜಿನ ಪ್ರಾಚಾರ್ಯ ಡಿ.ಕೆ. ಅಜೀಜ್ ಉಲ್ ಹಕ್ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡಾಕೂಟದಲ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಒಟ್ಟು ಏಳು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಪಂದ್ಯದ ವಾಲಿಬಾಲ್ ಸ್ಪರ್ಧೆಯಲ್ಲಿ ರೈನ್ಬೋ ಕಾಲೇಜಿನ ಬಾಲಕರ ತಂಡ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತು.
ಕಾರ್ಯಕ್ರಮದಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ. ಮೂಕಯ್ಯಸ್ವಾಮಿ, ಅಕ್ಕಿಗಿರಣಿ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ರೈನ್ಬೋ ಸಂಸ್ಥೆಯ ಅಧ್ಯಕ್ಷ ಶಾರುಖ್ ಕೆ.ಎಸ್., ಖಜಾಂಚಿ ಕೆ.ಎಸ್. ಮೆಹಬೂಬ, ಉಪನ್ಯಾಸಕರು, ಶಿಕ್ಷಣ ಸಂಯೋಜಕರು, ದೈಹಿಕ ಶಿಕ್ಷಣ ನಿರ್ದೇಶಕರು, ದೈಹಿಕ ಶಿಕ್ಷಕರು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.