Ballari | ಭೂಮಾನಂದ, ಅಶ್ವಿನಿ ಕೊಲೆ ಖಂಡಿಸಿ ಕಂಪ್ಲಿಯಲ್ಲಿ ಪ್ರತಿಭಟನೆ
ಬಳ್ಳಾರಿ/ಕಂಪ್ಲಿ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ ಕೊಲೆ ಹಾಗೂ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು, ಕಂದಾಯ ಅಧಿಕಾರಿ ಸುರೇಶ್ ಅವರಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನಕ್ಕೆ ತಂದರು.
ದಲಿತರ ಮೇಲಿನ ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಪರಿಹಾರ ಹಾಗೂ ಉದ್ಯೋಗ ನೀಡಬೇಕು. ಭೂಮಾನಂದ ಮತ್ತು ಅಶ್ವಿನಿ ಪ್ರಕರಣಗಳ ಆರೋಪಿಗಳನ್ನು ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳಿದ್ದರೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ಎಚ್. ಮರಿಸ್ವಾಮಿ ಸಣಾಪುರ ಹಾಗೂ ಎ.ಎಸ್. ಯಲ್ಲಪ್ಪ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿ. ರಾಮಣ್ಣ, ಎ. ಲಕ್ಷ್ಮಿಪತಿ, ವಸಂತರಾಜ ಕಹಳೆ, ಚನ್ನಬಸುವ, ಶ್ರೀನಿವಾಸ, ರಾಮಸಾಗರ ಬಸವರಾಜ, ಹುಲುಗಪ್ಪ, ಮೆಟ್ರಿ ಬಸವರಾಜ, ರವಿ ಮಣ್ಣೂರು, ಬಸವರಾಜ, ತಿಪ್ಪೇಶ ಸೇರಿದಂತೆ ಹಲವರು ಭಾಗವಹಿಸಿದ್ದರು.