Ballari | ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3.50 ಲಕ್ಷ ರೂ. ನೆರವು

Update: 2026-08-08 18:44 IST

ಬಳ್ಳಾರಿ/ಕಂಪ್ಲಿ: ತಾಲೂಕಿನ ದರೋಜಿ ವಲಯದ ದರೋಜಿ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ರಮದಡಿ ಗ್ರಾಮದ ಶ್ರೀ ಈಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ವಿತರಿಸಲಾಯಿತು.

ಡಿಡಿ ಹಸ್ತಾಂತರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷರ, ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಹಿಂದೂ ರುದ್ರಭೂಮಿಗಳ ನವೀಕರಣ, ಸಮುದಾಯ ಅಭಿವೃದ್ಧಿ, ಶಿಕ್ಷಕರ ಕೊರತೆ ಇರುವೆಡೆ ಜ್ಞಾನದೀಪ ಶಿಕ್ಷಕರ ನೇಮಕ, ಸುಜ್ಞಾನ ನಿಧಿ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ದುಶ್ಚಟಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಸಂಸ್ಥೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಲಿ ತಾಲೂಕಿನ ಎಮ್ಮಿಗನೂರು ವಲಯದ ಹೊಸ ನೇಲುಡಿ ಕಾರ್ಯಕ್ಷೇತ್ರದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 2 ಲಕ್ಷ ರೂ. ಮೊತ್ತದ ಡಿಡಿಯನ್ನು ವಿತರಿಸಲಾಯಿತು.

ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಎಲ್. ಮಾತನಾಡಿ, ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಪೂಜ್ಯರು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮುಂದಿನ ಪೀಳಿಗೆಯ ಯುವಕರು ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಶೀಘ್ರ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಗುರುಮೂರ್ತಿ, ವಲಯದ ಮಿಲಿಚರಕ ಮಂಜಣ್ಣ, ಪಂಚಾಯಿತಿ ಸದಸ್ಯ ರಾಯಣ್ಣ, ರವಿ ಹೊನ್ನೂರು, ಸ್ವಾಮಿ ರೇಣುಕಪ್ಪ, ಕುಮಾರಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವಸ್ಥಾನ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹೊಸ ನೇಲುಡಿ ಗ್ರಾಮದ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯರಾದ ಕರಿಬಸಯ್ಯ, ಕೊಟ್ರಯ್ಯ ಸ್ವಾಮಿ, ನಾಗರಾಜ್ ಇಟಗಿ, ಸಿದ್ದಪ್ಪ, ನಾಗರಾಜ್, ಶಂಭುಲಿಂಗ, ರಾಮಾಂಜನೇಯ, ಹೊಸಕೇರಪ್ಪ ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News