Ballari | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ಬಸವರಾಜ
ಕಂಪ್ಲಿಯಲ್ಲಿ ಮಾದಕ ವಸ್ತು ವಿರೋಧಿ ಸಪ್ತಾಹ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
ಬಳ್ಳಾರಿ/ಕಂಪ್ಲಿ : ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಹಂತವಾಗಿದ್ದು, ಈ ಸಮಯದಲ್ಲಿ ಮಾದಕ ವಸ್ತು ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ದುಶ್ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದು ಕಂಪ್ಲಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಸಲಹೆ ನೀಡಿದರು.
ಶ್ರೀ ಸ್ವಾಮಿ ವಿವೇಕಾನಂದ ಶಾಲೆ, ಕೋಟೆ ಕಂಪ್ಲಿ ಹಾಗೂ ಕಂಪ್ಲಿ ಪೊಲೀಸ್ ಠಾಣೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವ್ಯಸನದಿಂದ ವ್ಯಕ್ತಿಯ ಜೀವನವೇ ಹಾಳಾಗುವ ಸಾಧ್ಯತೆ ಇದ್ದು, ಯುವಜನರು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ ಜೀವನಶೈಲಿಯತ್ತ ಗಮನ ಹರಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಿಯಾದರೂ ಮಾದಕ ವಸ್ತುಗಳ ಮಾರಾಟ ಅಥವಾ ಅಕ್ರಮ ಸಾಗಾಟ ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “ಮಾದಕ ವಸ್ತುಗಳನ್ನು ಬಳಸುವುದಿಲ್ಲ” ಎಂಬ ಪ್ರತಿಜ್ಞೆ ಸ್ವೀಕರಿಸಿದರು.
ಮುಖ್ಯಗುರು ಜಿಲಾನಸಾಬ್ ಬಡಿಗೇರ್, ಪೊಲೀಸ್ ಸಿಬ್ಬಂದಿ, ಶಿಕ್ಷಕರಾದ ಕಂಬತ್ ಶ್ವೇತಾ, ಕೊಲ್ಕರ್ ಜಯಶ್ರೀ, ವರ್ಷಾ ಮಂಜುಮದಾರ್, ಗೌಸಿಯಾ, ಜೆ. ಅಕ್ಷತಾ, ಡಿ. ಉಮಾದೇವಿ, ಮಠದ ಸುನೀತಾ, ಕೊಲ್ಕರ್ ಉಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.