×
Ad

Ballari | ಕಂಪ್ಲಿಯಲ್ಲಿ ತಹಶೀಲ್ದಾರರಿಂದ ಬಿಎಲ್‌ಒಗಳ ಕಾರ್ಯ ಪರಿಶೀಲನೆ

Update: 2026-07-10 18:50 IST

ಬಳ್ಳಾರಿ/ಕಂಪ್ಲಿ : ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಜೂಗಲ್ ಮಂಜುನಾಯಕ ಹೇಳಿದರು.

ಪಟ್ಟಣದ ತೆಗ್ಗಿನ ಮಠ, ಕೋಟೆ ಪ್ರದೇಶ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿರುವ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ನೆಟ್‌ವರ್ಕ್ ಹಾಗೂ ಸರ್ವರ್ ಸಮಸ್ಯೆಗಳಂತಹ ತಾಂತ್ರಿಕ ಅಡಚಣೆಗಳನ್ನೂ ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ್ಯ ಪ್ರಗತಿಯಲ್ಲಿದೆ. ಬಿಎಲ್‌ಒಗಳ ಕಾರ್ಯವೈಖರಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಎಸ್‌ಐಆರ್ ಪ್ರಕ್ರಿಯೆ ಯಾವುದೇ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದ ನಿರ್ವಾಹಕ ಎ. ನಿರಂಜನಮೂರ್ತಿ, ಬಿಎಲ್‌ಒ ಗಂಗಮ್ಮ, ದ್ವಿತೀಯ ದರ್ಜೆ ಸಹಾಯಕ ಸುರೇಶ್, ಗ್ರಾಮ ಆಡಳಿತಾಧಿಕಾರಿ ವಮ್ಮಾರಿ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News