ಬಳ್ಳಾರಿ | ಡಿಪ್ಲೋಮಾ ಕಾಲೇಜು ಮುಂಭಾಗ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಬಳ್ಳಾರಿ/ ಕಂಪ್ಲಿ : ತಾಲೂಕಿನ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ಬಸ್ಗಳು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ವತಿಯಿಂದ ಬುಧವಾರ ಕಂಪ್ಲಿ ಹೊಸ ಬಸ್ ನಿಲ್ದಾಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಂಪ್ಲಿಯಿಂದ ಹೊಸಪೇಟೆ ಮಾರ್ಗವಾಗಿ ಸಂಚರಿಸುವ ಹಾಗೂ ಹೊಸಪೇಟೆಯಿಂದ ಕಂಪ್ಲಿಗೆ ಬರುವ ಬಸ್ಗಳನ್ನು ಡಿಪ್ಲೋಮಾ ಕಾಲೇಜು ಮುಂಭಾಗದಲ್ಲಿ ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು. ದೂರದೂರಿನಿಂದ ಬರುವ ನೂರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿಗಳು ಡಿಪೋ ನಿಯಂತ್ರಣಾಧಿಕಾರಿಗೆ ಎಚ್ಚರಿಕೆ ನೀಡಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಂಪ್ಲಿ ಬಸ್ ಸ್ಟ್ಯಾಂಡ್ ನಿಯಂತ್ರಣಾಧಿಕಾರಿ ಆದಿಶೇಷ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಎಬಿವಿಪಿ ಸದಸ್ಯ ಸಪ್ತಗಿರಿ ಮಂಚಿಕಂಠಿ ಮಾತನಾಡಿ, ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಳ್ಳಾರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ತಾಳ್ವರ ಭರತ್, ವಿದ್ಯಾರ್ಥಿಗಳಾದ ಕಾರ್ತಿಕ್, ಶಶಾಂಕ್, ರಾಮು, ಅನು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕಂಪ್ಲಿ ಪೊಲೀಸ್ ಠಾಣೆ ವತಿಯಿಂದ ಬಂದೋಬಸ್ತ್ ಏರ್ಪಡಿಸಲಾಗಿತ್ತು.