ಕಂಪ್ಲಿ | ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಯುವಕರ ಜವಾಬ್ದಾರಿಯಾಗಿದೆ: ತಹಶೀಲ್ದಾರ್ ಜೂಗಲ್ ಮಂಜುನಾಯಕ
ಬಳ್ಳಾರಿ/ಕಂಪ್ಲಿ: ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮದೊಂದಿಗೆ ಯುವಕರ ನೋಂದಣಿ ಕಾರ್ಯ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನರದಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಮುದಾಯಿಕ ಸಾಮಾಜಿಕ ಸಾಮರಸ್ಯ ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು 16 ವರ್ಷ ತುಂಬಿ ಮತ್ತು 35 ವರ್ಷದೊಳಗಿನ ಯುವಕರನ್ನೊಳಗೊಂಡ ಯುವ ಸಂಘ ರಚಿಸಬೇಕು. ನಗರ ಮತ್ತು ಗ್ರಾಮೀಣ ಮಟ್ಟದಲ್ಲಿ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮವಹಿಸಿ, ಸಂಘಗಳನ್ನು ಸ್ಥಾಪಿಸಬೇಕು ಎಂದರು.
ತಾ.ಪಂ. ಇಒ ಆರ್.ಕೆ. ಶ್ರೀಕುಮಾರ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕಂಪ್ಲಿ ತಾಲೂಕಿನಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಬೇಕಾಗಿದೆ. ಸ್ಥಳೀಯ ಸಮುದಾಯದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಯುವಕರನ್ನು ನೇರ ಪಾಲುದಾರರನ್ನಾಗಿ ಮಾಡುವುದು. ಹಾಗೆಯೇ ಕ್ರೀಡೆ, ಪಿಟ್ನೆಸ್, ಕೌಶಲ್ಯಾಭಿವೃದ್ಧಿ ಮೂಲಕ ಯುವ ಜನರ ಆರ್ಥಿಕ, ಸಾಮಾಜಿಕ ಸಬಲೀಕರಣ ಸಾಧಿಸುವುದು ಯೋಜನೆಯ ಉದ್ದೇಶವಾಗಿದೆ ಎಂದರು. ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಸಂಬಂಧಿಸಿದ ಕೆಲ ವಿಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ವಿವಿಧ ಇಲಾಖೆಯ ಟಿ.ಎಂ.ಬಸವರಾಜ, ಕೆ.ವಿರುಪಾಕ್ಷಪ್ಪ, ಗಾದಿಲಿಂಗಪ್ಪ, ಮಲ್ಲಪ್ಪ, ಮಹಾಬಲೇಶ್ವರಪ್ಪ ಸೇರಿದಂತೆ ಇತರರು ಇದ್ದರು.