ಬರಪೀಡಿತ ಪ್ರದೇಶಗಳಿಗೆ ಸಚಿವ ಬಿ.ನಾಗೇಂದ್ರ ಭೇಟಿ; ರೈತರಿಗೆ ಶೀಘ್ರ ನೆರವಿನ ಭರವಸೆ

Update: 2026-08-07 20:18 IST

ಸಂಡೂರು/ಬಳ್ಳಾರಿ 8: ನೂತನ ಸಚಿವ ಹಾಗೂ ಬರ ವೀಕ್ಷಣೆಯ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು, ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಂ ಅವರೊಂದಿಗೆ ಶುಕ್ರವಾರ ತಾಲೂಕಿನ ವಿಠಲಾಪುರ ಮತ್ತು ದರೋಜಿ ಗ್ರಾಮಗಳಿಗೆ ಭೇಟಿ ನೀಡಿ ಬರಪೀಡಿತ ಕೃಷಿ ಪ್ರದೇಶಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.

ಮಳೆ ಕೊರತೆಯಿಂದ ಒಣಗಿರುವ ಬೆಳೆಗಳನ್ನು ವೀಕ್ಷಿಸಿದ ಸಚಿವರು, ರೈತರ ಸಮಸ್ಯೆಗಳು, ಬೆಳೆ ಹಾನಿ ಹಾಗೂ ನೀರಿನ ಅಭಾವದ ಕುರಿತು ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ರೈತರಿಗೆ ಯಾವುದೇ ತೊಂದರೆಯಾಗದಂತೆ ತುರ್ತು ಪರಿಹಾರ ಕ್ರಮ ಕೈಗೊಂಡು ಸರ್ಕಾರದ ಸೌಲಭ್ಯಗಳನ್ನು ಶೀಘ್ರ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದರೋಜಿ ಗ್ರಾಮದಲ್ಲಿ ರೈತರು ಹಾಗೂ ಮೀನುಗಾರರೊಂದಿಗೆ ಸಂವಾದ ನಡೆಸಿದ ಸಚಿವರು, ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಸರ್ಕಾರ ಅಗತ್ಯ ನೆರವು ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಶಾಸಕಿ ಅನ್ನಪೂರ್ಣ ತುಕಾರಾಂ ಮಾತನಾಡಿ, ಸಂಡೂರು ತಾಲೂಕಿನ ಹಲವು ಭಾಗಗಳಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿದ್ದು, ಸಾವಿರಾರು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಈ ವರ್ಷ ವಾಡಿಕೆಗಿಂತ ಶೇ.67ರಷ್ಟು ಕಡಿಮೆ ಮಳೆಯಾಗಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅನೇಕರು ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬರಪೀಡಿತ ರೈತರಿಗೆ ವಿಶೇಷ ಪರಿಹಾರ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ಸಿಕ್ಕರೆ ಸಂತೋಷ: ಬಿ. ನಾಗೇಂದ್ರ

ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ. ನಾಗೇಂದ್ರ, ಬಳ್ಳಾರಿ ಜಿಲ್ಲೆಗೂ ಮತ್ತೊಂದು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಮಹಿಳಾ ಕೋಟಾದಡಿ ಶಾಸಕಿ ಅನ್ನಪೂರ್ಣ ತುಕಾರಾಂ ಅವರಿಗೆ ಸಚಿವ ಸ್ಥಾನ ದೊರೆತರೆ ಸಂತೋಷ. ಅವರಿಗೆ ಅವಕಾಶ ಸಿಕ್ಕರೆ ಜಿಲ್ಲೆಯ ಅಭಿವೃದ್ಧಿಗೆ ನಾವಿಬ್ಬರೂ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

“ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸಿದ್ದು ನಿಜ”: ಅನ್ನಪೂರ್ಣ ತುಕಾರಾಂ

ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಶಾಸಕಿ ಅನ್ನಪೂರ್ಣ ತುಕಾರಾಂ, ಪಕ್ಷದ ಹೈಕಮಾಂಡ್ ಸೂಚನೆಯಂತೆ ತಮ್ಮ ಪತಿ ತುಕಾರಾಂ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಲಾಗಿತ್ತು. ರಾಜ್ಯದಲ್ಲಿ ಐವರು ಮಹಿಳಾ ಶಾಸಕರಿದ್ದು, ಯಾರಿಗೆ ಅವಕಾಶ ನೀಡಿದರೂ ಸಂತೋಷದಿಂದ ಜವಾಬ್ದಾರಿ ನಿರ್ವಹಿಸುತ್ತೇವೆ ಎಂದು ಹೇಳಿದರು.

ತಮಗೆ ಇನ್ನೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ, ಆಶಾಭಾವನೆ ಇದೆ. ಅಂತಿಮ ನಿರ್ಧಾರ ಹೈಕಮಾಂಡ್‌ನದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಮುಂದಿನ ತೀರ್ಮಾನವನ್ನು ಕಾದು ನೋಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News