×
Ad

SIR ಯಶಸ್ವಿಗೆ ಅಧಿಕಾರಿಗಳ ಸಮರ್ಪಿತ ಕಾರ್ಯ ಅಗತ್ಯ: ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

Update: 2026-06-12 00:18 IST

ಸಂಡೂರು/ಬಳ್ಳಾರಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯವನ್ನು ನಿಖರವಾಗಿ ಹಾಗೂ ಪಾರದರ್ಶಕವಾಗಿ ಜಾರಿಗೊಳಿಸಲು ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್ ಸೂಚಿಸಿದರು.

ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ ಕುಮಾರಸ್ವಾಮಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಮೇಲ್ವಿಚಾರಕರಿಗೆ ಚುನಾವಣಾ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ (SIR) ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ಅದರಂತೆ ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಚುನಾವಣಾ ಆಯೋಗದಿಂದ ನೀಡಲಾಗುವ Enumeration ಫಾರಂಗಳನ್ನು ಮತದಾರರಿಗೆ ವಿತರಿಸಬೇಕು ಎಂದು ತಿಳಿಸಿದರು.

ಮತದಾರರಿಂದ ಭರ್ತಿ ಮಾಡಿದ ಅರ್ಜಿಗಳಿಗೆ ಸಹಿ ಪಡೆದು, ಸಂಬಂಧಿಸಿದ ಮಾಹಿತಿಯನ್ನು ತಮ್ಮ ಅಧಿಕೃತ ಲಾಗಿನ್ ವ್ಯವಸ್ಥೆಯಲ್ಲಿ ದಾಖಲಿಸುವ ಜವಾಬ್ದಾರಿ ಮತಗಟ್ಟೆ ಅಧಿಕಾರಿಗಳ ಮೇಲಿದೆ. ಮತದಾರರ ಪಟ್ಟಿಯ ಶುದ್ಧೀಕರಣದ ದೃಷ್ಟಿಯಿಂದ ಮರಣ ಹೊಂದಿದ ಮತದಾರರು ಹಾಗೂ ಶಾಶ್ವತವಾಗಿ ವಲಸೆ ಹೋಗಿರುವ ಮತದಾರರ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಿ ದಾಖಲಿಸಬೇಕು ಎಂದು ಸೂಚಿಸಿದರು.

ಪ್ರತಿ ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಯಾವುದೇ ಮತದಾರರು ಮಾಹಿತಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಅದರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅನುಷ್ಠಾನ, ಮನೆ-ಮನೆ ಸಮೀಕ್ಷೆ, ದಾಖಲೆ ಪರಿಶೀಲನೆ, ಡಿಜಿಟಲ್ ದಾಖಲಾತಿ, ಮತದಾರರ ಮಾಹಿತಿಯ ನವೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ 95 ಸಂಡೂರು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿರುವ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀ ಚಿದಾನಂದ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಶ್ರೀ ಜಿ. ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಇದೇ ವೇಳೆ ಸಂಡೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರು, ಕಂದಾಯ ನಿರೀಕ್ಷಕರು ಹಾಗೂ ಚುನಾವಣೆ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ತರಬೇತಿಯಲ್ಲಿ ಭಾಗವಹಿಸಿ ಮಾರ್ಗದರ್ಶನ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News