×
Ad

ಬಳ್ಳಾರಿ ನಗರದ ಸರಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವು: ಸಚಿವ ಭೈರತಿ ಸುರೇಶ್

Update: 2025-12-02 22:28 IST

ಬಳ್ಳಾರಿ,ಡಿ.2: ಗಣಿನಾಡು ಬಳ್ಳಾರಿ ನಗರದ ಸರಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಭೈರತಿ ಸುರೇಶ್, ನಗರದಲ್ಲಿ ಪಾರ್ಕ್, ರಸ್ತೆ ಮತ್ತು ಸರಕಾರಿ ಜಾಗದ ಒತ್ತುವರಿಯಾಗಿ ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೆ ಅಂತಹ ಒತ್ತುವರಿ ಪ್ರಕರಣಗಳನ್ನು ಪತ್ತೆ ಮಾಡಿ ಒಂದು ತಿಂಗಳೊಳಗಾಗಿ ಆ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಿದರು.

ಸರಕಾರಿ ಜಾಗವನ್ನು ಭೂಗಳ್ಳರಿಂದ ರಕ್ಷಿಸಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ನ್ಯಾಯಾಲಯಗಳಲ್ಲಿ ವಾದ ಮಂಡಿಸಲು ಸಮರ್ಥರಿರುವ ವಕೀಲರನ್ನು ನೇಮಕ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದ್ದೇನೆ ಎಂದು ಭೈರತಿ ಸುರೇಶ್ ಹೇಳಿದರು.

ನಗರದೆಲ್ಲೆಡೆ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಕಲುಷಿತ ನೀರು ಪೂರೈಕೆ ಪ್ರಕರಣಗಳು ಕಂಡುಬಂದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ತೆರಿಗೆ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಗಮನಹರಿಸಬೇಕು. ಕಟ್ಟುನಿಟ್ಟಾಗಿ ವಾಣಿಜ್ಯ ಕಟ್ಟಡಗಳಿಂದ ತೆರಿಗೆ ವಸೂಲು ಮಾಡಬೇಕು. ಅತಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡ ಮಾಲಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ವಾಣಿಜ್ಯ ಮತ್ತು ಕಟ್ಟಡ ಪರವಾನಗಿಯನ್ನು ತ್ವರಿತವಾಗಿ ವಿತರಣೆ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಅಮೃತ್ 2.0 ಯೋಜನೆಯಡಿ ಉದ್ಯಾನಗಳು ಮತ್ತು ಕೆರೆಗಳನ್ನು ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಖಾತಾ ಅಭಿಯಾನವನ್ನು ಇನ್ನಷ್ಟು ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಪ್ರತಿಯೊಬ್ಬ ಅಧಿಕಾರಿಯೂ ವಾರ್ಡ್ ಗಳಿಗೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಂಡುಕೊಳ್ಳಬೇಕು. ಹೀಗೆ ಯಾವ ವಾರ್ಡಿಗೆ ಭೇಟಿ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯುಕ್ತರನ್ನು ಒಳಗೊಂಡ ವಾಟ್ಸಪ್ ಗ್ರೂಪ್ ಆರಂಭಿಸಬೇಕು ಮತ್ತು ಆಯಾ ವಾರ್ಡ್ ನ ಜನಪ್ರತಿನಿಧಿಗಳನ್ನು ಸ್ಥಳಕ್ಕೆ ಕರೆದೊಯ್ಯಬೇಕು ಎಂದು ಸುರೇಶ್ ಸೂಚನೆ ನೀಡಿದರು.

ಬೀದಿ ನಾಯಿ ನಿಯಂತ್ರಣಕ್ಕೆ ಸಂತಾನ ನಿಯಂತ್ರಣ ಲಸಿಕೆ ಹಾಕಿಸಬೇಕು ಮತ್ತು ಬಿಡಾಡಿ ದನಗಳನ್ನು ಗೋಶಾಲೆಗೆ ಹಾಕಬೇಕು. ಇಂದಿರಾ ಕ್ಯಾಂಟೀನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಸುರೇಶ್ ಸೂಚನೆ ನೀಡಿದರು.

ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಆದಷ್ಟೂ ಬೇಗ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಬೇಕು. 127 ಕೋಟಿ ರೂಪಾಯಿ ವೆಚ್ಚದಲ್ಲಿ ಎಂಜಿಎನ್‍ವಿವೈ ಕಾಮಗಾರಿಗಳನ್ನು ಕೈಗೊಳ್ಳಬೇಕು. ಆಲಪುರ ಕೆರೆ ಮತ್ತು ಬಂಡಿಕೆರೆಯನ್ನು 25 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರದಿಂದ 200 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಭೈರತಿ ಸುರೇಶ್ ಹೇಳಿದರು.

ಸಭೆಯಲ್ಲಿ ಸಂಸದ ಈ.ತುಕಾರಾಂ, ಶಾಸಕರಾದ ಬಿ.ನಾಗೇಂದ್ರ, ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಉಪಮೇಯರ್ ಮುಬೀನಾ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News