ಕಂಪ್ಲಿಯ ಉರ್ದು ಶಾಲೆಗೆ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮದ ಸಮಿತಿ ಸದಸ್ಯ ಬಿ. ಜಾಫರ್ ಸಾಧಿಕ್ ಭೇಟಿ
ಬಳ್ಳಾರಿ / ಕಂಪ್ಲಿ: ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಸಮಿತಿ ಸದಸ್ಯರಾದ ಬಿ. ಜಾಫರ್ ಸಾಧಿಕ್ ಅವರು ಮಂಗಳವಾರ ಕಂಪ್ಲಿ ಪಟ್ಟಣದ 9ನೇ ವಾರ್ಡ್ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಶಾಲೆಯಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ಗುರುತಿಸಿದ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಶಿಕ್ಷಕರೊಂದಿಗೆ ಚರ್ಚೆ ನಡೆಸಿದರು.
ನಂತರ ಮಾತನಾಡಿದ ಅವರು, ಶಾಲೆಯಲ್ಲಿ ಕಿಟಕಿ ಹಾಗೂ ಬಾಗಿಲುಗಳ ದುರಸ್ತಿ, ಪೈಪ್ಲೈನ್ ವ್ಯವಸ್ಥೆ, ಸುಣ್ಣ–ಬಣ್ಣ ಕಾಮಗಾರಿ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣದ ಅಗತ್ಯತೆ ಇರುವುದನ್ನು ಗಮನಿಸಲಾಗಿದೆ ಎಂದು ತಿಳಿಸಿದರು.
ಈ ಎಲ್ಲಾ ಸಮಸ್ಯೆಗಳ ಕುರಿತು ಸಮಗ್ರ ವರದಿಯನ್ನು ಬಳ್ಳಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಅಗತ್ಯ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಿ, ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ವಾತಾವರಣ ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.