ಸಿರುಗುಪ್ಪ | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಬದುಕು ರೂಪಿಸಿಕೊಳ್ಳಿ: ಮುಹಮ್ಮದ್ ಖಾಸಿಂ
ಸಿರುಗುಪ್ಪ: ಮಾದಕ ದ್ರವ್ಯದ ವ್ಯಸನವು ಯುವಜನರ ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ ಕರೆ ನೀಡಿದರು.
ನಗರದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಯುವಕರು ವಿವಿಧ ಕಾರಣಗಳಿಂದ ಮಾದಕ ವ್ಯಸನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ದ್ರವ್ಯ ಸೇವನೆಯು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 26ರಂದು ವಿಶ್ವದಾದ್ಯಂತ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆ ತಡೆ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಮಾದಕ ವ್ಯಸನದಿಂದ ಹಸಿವು ಕಡಿಮೆಯಾಗುವುದು, ತೂಕ ಇಳಿಕೆಯಾಗುವುದು, ಆತಂಕ, ನಿದ್ರಾಹೀನತೆ, ಮಾನಸಿಕ ಅಸ್ವಸ್ಥತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಭಾರತದಲ್ಲಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಣೆ ತಡೆಗೆ ಕಠಿಣ ಕಾನೂನುಗಳಿದ್ದು, ಸಮಾಜದ ಸಹಕಾರದಿಂದ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಆಪ್ತ ಸಮಾಲೋಚಕ ಮಲ್ಲೇಶಪ್ಪ ಮಾತನಾಡಿ, ಮಾದಕ ವ್ಯಸನಕ್ಕೆ ಒಳಗಾದವರನ್ನು ವ್ಯಸನಮುಕ್ತ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ಹಾಗೂ ಸಮಾಲೋಚನೆ ಪಡೆಯುವಂತೆ ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಸಿ. ದಾದಾಪೀರ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.