ಪ್ರಧಾನಿಗೆ ಬೆಳ್ಳಿ ಮೂರ್ತಿ ಕೊಟ್ಟಿದ್ದು ನಾನೇ : ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು, ಆ. 12: ಬೆಂಗಳೂರಿನ ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಮೂರ್ತಿ ಕೊಟ್ಟಿದ್ದು ತಮ್ಮ ಸ್ವಂತದ್ದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಈ ಸಂಬಂಧ ಸ್ಪಷ್ಟಣೆ ನೀಡಿರುವ ಅವರು, ಸಮಾರಂಭದಲ್ಲಿ ತಾವು ಪ್ರಧಾನಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿ ಮೋದಿಗೆ ಗಣೇಶಮೂರ್ತಿ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.