BMTC ಬಸ್ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ | ಪ್ರಾಥಮಿಕ ವರದಿ ಆಧರಿಸಿ ಎಂಟು ಅಧಿಕಾರಿಗಳು ಅಮಾನತು: ಸಚಿವ ಬೈರತಿ ಸುರೇಶ್

Update: 2026-08-20 00:08 IST

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‍ಗಳಿಗೆ ಅಗತ್ಯವಿರುವ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಪ್ರಾಥಮಿಕ ವರದಿ ಆಧರಿಸಿ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಗೋವಿಂದರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಡಿಭಾಗಗಳ ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪದ ಕುರಿತು ಈಗಾಗಲೇ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ತನಿಖೆಯ ವರದಿಯನ್ನು ಆಧರಿಸಿ ಎಂಟು ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಜರುಗಿಸಲಾಗಿದೆ ಎಂದರು.

ಅಕ್ರಮದ ಸಂಪೂರ್ಣ ಸ್ವರೂಪ, ಇದರಲ್ಲಿ ಭಾಗಿಯಾಗಿರುವವರ ಪಾತ್ರ ಹಾಗೂ ಇಲಾಖೆಗೆ ಉಂಟಾಗಿರುವ ನಷ್ಟದ ಕುರಿತು ಪರಿಶೀಲಿಸಲು ತನಿಖಾ ಸಮಿತಿ ರಚಿಸಲಾಗಿದೆ. ಸಮಿತಿಯು ತನ್ನ ಸಂಪೂರ್ಣ ವರದಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ತನಿಖಾ ಸಮಿತಿಯ ಅಂತಿಮ ವರದಿ ಸರಕಾರಕ್ಕೆ ಸಲ್ಲಿಕೆಯಾದ ಬಳಿಕ ಅದನ್ನು ಪರಿಶೀಲಿಸಿ, ವರದಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಆಧಾರದ ಮೇಲೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News