ಸೋನಂ ವಾಂಗ್ಚುಕ್ ರ ಹೋರಾಟವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಾದೃಷ್ಟಕರ: ನಟ ಕಿಶೋರ್

Update: 2026-07-19 23:42 IST

ಬೆಂಗಳೂರು: ದಿಲ್ಲಿಯಲ್ಲಿ ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಾದೃಷ್ಟಕರ ಎಂದು ಚಿತ್ರನಟ ಕಿಶೋರ್ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಸೋನಂ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ‘ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ದಿಲ್ಲಿಯ ಜಂತರ್ ಮಂತರ್‍ನಲ್ಲಿ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿರುವ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ನಾಯಕತ್ವವು ಸೋನಂ ವಾಂಗ್ಚುಕ್ ಮತ್ತು ಯುವ ಜನತೆ ನಡೆಸುತ್ತಿರುವ ಹೋರಾಟದ ಬಗ್ಗೆ ಸ್ಪಂದಿಸಿ ವಿದ್ಯಾರ್ಥಿಗಳ ಆತಂಕಗಳಿಗೆ ಉತ್ತರ ನೀಡಬೇಕಾಗಿತ್ತು. ಆದರೆ ಹೋರಾಟದ ಬಗ್ಗೆ ಮೌನ ವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದೇಶದ ಯುವಜನತೆ ಇಂತಹ ಅನ್ಯಾಯಗಳ ವಿರುದ್ಧ ಎಚ್ಚೆತ್ತುಕೊಂಡಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಸ್ಥಾಪನೆಯಾಗುವವರೆಗೆ ಹೋರಾಟವನ್ನು ಮುಂದುವರಿಸಬೇಕಾಗಿದೆ ಎಂದು ಕಿಶೋರ್ ಕರೆ ನೀಡಿದರು.

ಕೆಆರ್ ಎಸ್ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿ, ಗಾಂಧಿ ಮಾರ್ಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಹೋರಾಟವನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿರುವುದು ಖಂಡನೀಯ. ಸುಮಾರು 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರಕಾರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಯುವಜನತೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಾ ಪರೀಕ್ಷಾ ಅಕ್ರಮಗಳನ್ನು ತಡೆಯಲು ವಿಫಲವಾಗಿರುವ ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಹಾಳು ಮಾಡಿರುವ ಕೇಂದ್ರ ಸರಕಾರದ ನೈತಿಕ ಹೊಣೆಗಾರಿಕೆಯ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧರಣಿ ಸತ್ಯಾಗ್ರಹದಲ್ಲಿ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಕರವೇ ಶಿವರಾಮೇಗೌಡ, ಹಿರಿಯ ವಕೀಲ ಬಾಲನ್, ಕೆ.ಎನ್.ಜಗದೀಶ್ ಕುಮಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.



 


 


 





 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News