ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ | ಶಿವಶಂಕರಪ್ಪ ಎಸ್. ಸಾಹುಕಾರ್ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ
ಶಿವಶಂಕರಪ್ಪ ಎಸ್. ಸಾಹುಕಾರ್
ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಡಾಲರ್ಸ್ ಕಾಲನಿಯಲ್ಲಿರುವ ಸಾಹುಕಾರ್ ಅವರ ನಿವಾಸ ಸೇರಿದಂತೆ ಅವರ ಸಂಬಂಧಿಕರ ಮನೆಗಳಲ್ಲೂ ಸಿಐಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆದಿದೆ. ಪರೀಕ್ಷಾ ದಾಖಲೆಗಳು ಹಾಗೂ ಒಎಂಆರ್ ಶೀಟ್ಗಳಲ್ಲಿ ಅಕ್ರಮವಾಗಿ ಬದಲಾವಣೆ ಮಾಡಿರುವುದು, ಮಧ್ಯವರ್ತಿಗಳಿಗೆ ಹಣ ಪಾವತಿ ಸೇರಿದಂತೆ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಇತರ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಸಾಹುಕಾರ್ ಸೇರಿದಂತೆ ಪ್ರಕರಣದ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ನೇಮಕಾತಿ ಪರೀಕ್ಷೆಗೂ ಮುನ್ನವೇ ಆರೋಪಿಗಳ ತಂಡವು 24 ಅಭ್ಯರ್ಥಿಗಳಿಂದ ಮುಂಗಡ ಹಣ ಪಡೆದು ಪ್ರತ್ಯೇಕ ತರಬೇತಿ ನೀಡಿತ್ತು. ಅಭ್ಯರ್ಥಿಯೊಬ್ಬರಿಂದ 40 ಲಕ್ಷ ರೂ.ಗಳಿಂದ ಹಿಡಿದು 80 ಲಕ್ಷ ರೂ.ವರೆಗೆ ಸುಮಾರು 12 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಆರೋಪಿಗಳು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.