×
Ad

ಮುಂದಿನ ವಾರ ಸಭೆ ಕರೆದು ದಲಿತರ 19 ಬೇಡಿಕೆಗಳ ಕುರಿತು ಚರ್ಚೆ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ

ಫ್ರೀಡಂಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ

Update: 2026-07-03 19:07 IST

ಬೆಂಗಳೂರು: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆದ 'ದಲಿತ ಜನಾಗ್ರಹ ಸಮಾವೇಶ'ಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಪ್ರತಿಭಟನಾಕಾರರು ಸಲ್ಲಿಸಿದ 19 ಬೇಡಿಕೆಗಳ ಕುರಿತು ಮುಂದಿನ ವಾರ ವಿಧಾನಸೌಧದಲ್ಲಿ ಸಂಘಟನೆಯ ಪದಾಧಿಕಾರಿಗಳು, ಸಂಬಂಧಿತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಅವರು ಭರವಸೆ ನೀಡಿದರು. ಸಾಧ್ಯವಾದರೆ ಮುಖ್ಯಮಂತ್ರಿಯವರನ್ನೂ ಸಭೆಗೆ ಆಹ್ವಾನಿಸುವುದಾಗಿ ತಿಳಿಸಿದರು.

ದಲಿತ ಸಮುದಾಯದ ಭೂಮಿ, ಶಿಕ್ಷಣ, ವಸತಿ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವು ಇದೆ. ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಪರಮೇಶ್ವರ ಅವರು ಹೇಳಿದರು.

ಶಿಕ್ಷಣ ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿದ್ದು, ದಲಿತ ಸಮುದಾಯದ ಮುಂದಿನ ಪೀಳಿಗೆ ಯಾವುದೇ ರೀತಿಯ ಅನ್ಯಾಯ ಅಥವಾ ನೋವಿಗೆ ಒಳಗಾಗದಂತೆ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಇಂದು ಬೇಡಿಕೆಗಳ ಕುರಿತು ಯಾವುದೇ ನಿರ್ದಿಷ್ಟ ಘೋಷಣೆ ಮಾಡುವುದಿಲ್ಲ. ಆದರೆ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಸಮಾವೇಶದಲ್ಲಿ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಶಾಸಕ ನಾರಾಯಣಸ್ವಾಮಿ, ಮಾವಳ್ಳಿ ಶಂಕರ್, ಪ್ರೊ. ಇಂದಿರಾ ಕೃಷ್ಣಪ್ಪ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News