×
Ad

Bengaluru | ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ.ವಂಚನೆ ಆರೋಪ: ತಂದೆ-ಮಗಳ ಬಂಧನ

Update: 2026-06-08 23:37 IST

ಸಾಂದರ್ಭಿಕ ಚಿತ್ರ (AI)

ಬೆಂಗಳೂರು: ನಿರುದ್ಯೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ವಂಚಿಸಿದ ಆರೋಪದಡಿ ತಂದೆ, ಮಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಎಂ.ಎ.ಮನ್ಸೂರ್ ಅಹ್ಮದ್ ಹಾಗೂ ಆತನ ಪುತ್ರಿ ಎಂಬಿಎ ಪದವೀಧರೆ ಶಂಶಾದ್ ಬೇಗಂ ಎಂ.ಎಂ. ಎಂದು ಗುರುತಿಸಲಾಗಿದೆ. ಬಂಧಿತರು ಸುಮಾರು 5.3 ಕೋಟಿ ರೂ.ಗೂ ಹೆಚ್ಚು ಹಣ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದ ಆರೋಪಿಗಳು ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದರು. ಅವರಿಗೆ ರೈಲ್ವೆ, ಆದಾಯ ತೆರಿಗೆ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮಾಡಿಸಿಕೊಡುವ ಭರವಸೆ ನೀಡುತ್ತಿದ್ದರು. ನಂತರ ನಕಲಿ ನೇಮಕಾತಿ ಪತ್ರಗಳನ್ನು ನೀಡಿ ವಂಚಿಸುತ್ತಿದ್ದರು.

ಅಭ್ಯರ್ಥಿಗಳನ್ನು ನಂಬಿಸಲು ಕೆಲವರಿಗೆ 4 ತಿಂಗಳ ಸಂಬಳವನ್ನು ಸಹ ನೀಡಿದ್ದರು. ಉತ್ತರ ಕರ್ನಾಟಕ ಭಾಗದ ಸುಮಾರು 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಸುಮಾರು 5.3 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದಾರೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ವಂಚನೆಗೊಳಗಾಗಿದ್ದ ಸಂಗಮೇಶ್ ರಾಚಯ್ಯ ವಸ್ತ್ರದ್ ಎಂಬವರು 2025ರ ನವೆಂಬರ್‍ನಲ್ಲಿ ಸಿಸಿಬಿಗೆ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು, ಇಬ್ಬರನ್ನೂ ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News