ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ವೇಳೆ ಗೊಂದಲ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಅಶೋಕ್ ಆಗ್ರಹ

Update: 2026-08-02 23:01 IST

ಬೆಂಗಳೂರು : ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, ಓಎಂಆರ್ ಶೀಟ್‍ಗಳ ಗೊಂದಲ ಹಾಗೂ ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ. ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಗೊಂದಲವಾದ ಪರೀಕ್ಷೆಯನ್ನು ಸಂಬಂಧಿತ ಕೇಂದ್ರದಲ್ಲಿ ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕು. ಜೊತೆಗೆ ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯುವಕರ ಭವಿಷ್ಯ ಹಾಳು ಮಾಡಿದ ಸರಕಾರಕ್ಕೆ ಉತ್ತರದಾಯಿತ್ವ ಯಾರು? ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ ಎಂದು ಅಶೋಕ್ ಒತ್ತಾಯಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News