×
Ad

ಶಿವರಾಮ ಕಾರಂತ ಲೇಔಟ್‌ನಲ್ಲಿ ನಿವೇಶನ ಹಂಚಿಕೆ: ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಅನುಮತಿ ನೀಡಿದ ಹೈಕೋರ್ಟ್

Update: 2026-07-03 19:16 IST
Photo credit: PTI

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಬಿಡಿಎಗೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಚಿಸಲಾಗಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯ್ಕ್ ಅವರಿದ್ದ ವಿಶೇಷ ನ್ಯಾಯಪೀಠ ಶುಕ್ರವಾರ ಸರ್ಕಾರ ಹಾಗೂ ಬಿಡಿಎ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿತು.

ಬಿಡಿಎ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು. ಬಡಾವಣೆಯ ಅಭಿವೃದ್ಧಿ ಕಾಮಗಾರಿಗಾಗಿ 1,100 ಕೋಟಿ ರೂ. ಸಾಲ ಪಡೆದು ಬಡ್ಡಿ ಕಟ್ಟಲಾಗುತ್ತಿದೆ. ಬಡಾವಣೆ ಕಾಮಗಾರಿ ಅಂತಿಮ ಹಂತದಲ್ಲಿದೆ. ನಿವೇಶನ ಹಂಚಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಆದ್ದರಿಂದ, ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ದುಬಾರಿ ಅರ್ಜಿ ಶುಲ್ಕ ವಿಧಿಸದಂತೆ ಸಲಹೆ ನೀಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಅನುಮತಿ ನೀಡಿತು. ಜತೆಗೆ, ಅರ್ಜಿ ಸ್ವೀಕರಿಸಿದರೂ ನಿವೇಶನ ಹಂಚಿಕೆಗೆ ಈ ಹಿಂದೆ ನೀಡಲಾಗಿರುವ ನಿರ್ಬಂಧವನ್ನು ನ್ಯಾಯಾಲಯ ಮುಂದುವರಿಸಿದೆ.

ಈ ಹಿಂದೆಯೂ ಬಿಡಿಎ ಎರಡು ಬಾರಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಆದರೆ, ನ್ಯಾಯಾಲಯ ಅನುಮತಿ ನೀಡಿರಲಿಲ್ಲ. ಬದಲಿಗೆ ಬಡಾವಣೆ ಅಭಿವೃದ್ಧಿ ವಿಧಿವಿಧಾನಗಳ ಬಗ್ಗೆ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತ್ತು. ನಿವೇಶನ ಹಂಚಿಕೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್‌ 2024ರಲ್ಲಿ ಮಧ್ಯಂತರ ಅದೇಶ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News