ಜನಾರ್ಧನ ರೆಡ್ಡಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲು ಸುಧಾಕರ ರೆಡ್ಡಿ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ಧನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿಯಾಗಿರುವ ಸುಧಾಕರ ರೆಡ್ಡಿ ಅವರು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಜನಾರ್ಧನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕದಲ್ಲಿ ಮಾದಕವಸ್ತು (ಡ್ರಗ್) ಮಾಫಿಯ ಹೆಚ್ಚಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ಯ ತಾಂಡವವಾಡುತ್ತಿದೆ. ಕಾಂಗ್ರೆಸ್ ಪ್ರೇರಿತ ಗೂಂಡಾ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕರೇ ಪೊಲೀಸ್ ಠಾಣೆಗೆ ತೆರಳಿ ಬೆದರಿಸಿ ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಹಲ್ಲೆ ಆರೋಪಿಗಳನ್ನು ಮತ್ತು ಇದರ ಹಿಂದಿರುವ ದುಷ್ಟ ಶಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ.