ಡಿ.13 ರಂದು ಜಿಲ್ಲೆಯಲ್ಲಿ ಬೃಹತ್ ರಾಷ್ಟ್ರೀಯ ಲೋಕ ಆದಾಲತ್ : ನ್ಯಾ.ಎಸ್.ಬಿ.ರಹಮಾನ್
ಬೀದರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.13 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ್ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ.ರಹಮಾನ್ ಅವರು ತಿಳಿಸಿದರು.
ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಡಿ.13 ರಂದು ನಡೆಯುವ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ನ ಪೂರ್ವಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ, ಸಿವಿಲ್, ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳು, ರಾಜಿ ಯಾಗಬಹುದಾದ ಅಪರಾಧಿಕ ಪ್ರಕರಣಗಳು, ಕೌಟುಂಬಿಕ, ಕಂದಾಯ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದರು.
ಈ ಹಿಂದೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿತ್ತು. ಆ ಲೋಕ ಅದಾಲತ್ ನಲ್ಲಿ ಜಿಲ್ಲೆಯಾದ್ಯಾಂತ ಒಟ್ಟು 38,038 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅವುಗಳಲ್ಲಿ 9,899 ಬಾಕಿ(ಪೇಂಡಿಂಗ್) ಪ್ರಕರಣಗಳನ್ನು ಹಾಗೂ 28,139 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಲೋಕಅದಾಲತ್ನಲ್ಲಿ ನ್ಯಾಯಾಲಯದಲ್ಲಿರುವ ಬಾಕಿ (ಪೇಂಡಿಂಗ್) ಇರುವ ಪ್ರಕರಣಗಳನ್ನು ಹೆಚ್ಚಾಗಿ ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 29,124 ಪ್ರಕರಣಗಳು ಪೆಂಡಿಂಗ್ ಇದ್ದು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ. ಅದಕ್ಕಾಗಿ ಎಲ್ಲಾ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಒಟ್ಟು 17 ಲೋಕ ಅದಾಲತ್ ಬೇಂಚ್ಗಳನ್ನು ರಚಿಸಲಾಗಿದೆ. ಪ್ರಕರಣಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯದ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಕಕ್ಷಿಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಹಾಗೆಯೇ ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ ಎಂದು ಅವರು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಅರ್ಜುನ್ ಬನಸೋಡೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ್ ದೊರೆ ಹಾಗೂ ಆಕಾಶ್ ಸಜ್ಜನಶೆಟ್ಟಿ ಸೇರಿದಂತೆ ಇತರರು ಇದ್ದರು.