×
Ad

ಬಾಲ್ಯ ವಿವಾಹ ತಡೆಯಲು ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು : ಡಿಸಿ ಶಿಲ್ಪಾ ಶರ್ಮಾ

Update: 2025-09-08 20:43 IST

ಬೀದರ್ : ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು, ಸರ್ಕಾರಿ ನೌಕರರ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ನಿರ್ಲಕ್ಷ್ಯ ತೋರಿದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 199(C) ರಂತೆ ಕಡ್ಡಾಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದೆ. ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯ. ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುತ್ತದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿಯು ತಾಯಂದಿರ ಮರಣ, ಶಿಶು ಮರಣ, ಅಪೌಷ್ಠಿಕತೆ ಉಂಟು ಮಾಡುವುದಲ್ಲದೇ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಪರಿಣಾಮ ಉಂಟು ಮಾಡುತ್ತದೆ ಎಂದು ವಿವರಿಸಿದ್ದಾರೆ.

ಬಾಲ್ಯ ವಿವಾಹ ತಡೆಗಟ್ಟುವ ಕಾರ್ಯವು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಪ್ರಕಾರ ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ 18 ವರ್ಷದೊಳಗಿನ ಹೆಣ್ಣು ಮಗುವನ್ನು ಮದುವೆಯಾದ ವಯಸ್ಕ ವ್ಯಕ್ತಿ, ಮದುವೆ ಮಾಡುವ ಪಾಲಕ ಪೋಷಕರು, ಇಂತಹ ಮದುವೆಯಲ್ಲಿ ಭಾಗವಹಿಸುವವರು, ಬಾಲ್ಯವಿವಾಹ ಏರ್ಪಡಿಸುವ, ನಿರ್ದೇಶಿಸುವ, ನೆರವೇರಿಸುವ ಮತ್ತು ಮದುವೆಗೆ ಕುಮ್ಮಕ್ಕು ನೀಡುವ ಸಂಸ್ಥೆ, ವ್ಯಕ್ತಿ, ಕಾಯ್ದೆಯಡಿ ನೀಡಿದ ತಡೆಯಾಜ್ಞೆ ಉಲ್ಲಂಘಿಸಿದವರು, ಮಗುವಿನ ಜವಾಬ್ದಾರಿ ಹೊತ್ತ ವ್ಯಕ್ತಿ, ಸಂಸ್ಥೆಯ ನಿರ್ಲಕ್ಷ್ಯತೆಯಿಂದ ಬಾಲ್ಯವಿವಾಹವನ್ನು ತಡೆಯಲು ವಿಫಲರಾದವರು ಸಹ ತಪ್ಪಿತಸ್ಥರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಕಾಯ್ದೆ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ. ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಇವೆರಡರಿಂದಲೂ ಶಿಕ್ಷೆಗೆ ಗುರಿಯಾಗತಕ್ಕದ್ದು, ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಯಂ ಪ್ರೇರಿತವಾಗಿ ದೂರು ದಾಖಲು ಮಾಡುವ ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News