ಹುಲಸೂರು | ಗ್ರಾಮ ಲೆಕ್ಕಾಧಿಕಾರಿಗಳ ತಪ್ಪಿನಿಂದ ರೈತರಿಗೆ ತಪ್ಪಿದ ಪರಿಹಾರ ಆರೋಪ: ಕ್ರಮಕ್ಕೆ ಆಗ್ರಹ
ಹುಲಸೂರು: ತಾಲ್ಲೂಕಿನ ಹಲವಾರು ಗ್ರಾಮಗಳ ರೈತರ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡದೇ ತಪ್ಪು ಮಾಹಿತಿ ಸಲ್ಲಿಸಿದ ಪರಿಣಾಮ ಅತಿವೃಷ್ಟಿಯಿಂದ ಹಾನಿಗೊಳಗಾದ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರ ದೊರೆಯದೆ ಅನ್ಯಾಯವಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.
ಈ ಸಂಬಂಧ ಸಂಘದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರೈತರು ತಹಸೀಲ್ದಾರ್ ಶಿವಾನಂದ್ ಮೆತ್ರೆ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.
ಬೇಲೂರು, ಮುಚಳಂಬ, ಆನಂದವಾಡಿ ಸೇರಿದಂತೆ ಹಲವಾರು ಗ್ರಾಮಗಳ ರೈತರ ಜಮೀನುಗಳಿಗೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಆದರೂ ಕೂಡ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ಜಮೀನುಗಳಿಗೆ ಭೇಟಿ ನೀಡದೆ ಮುಂಗಾರು ಹಂಗಾಮಿನ ಬೆಳೆ ಕುರಿತು ತಪ್ಪು ಮಾಹಿತಿ ದಾಖಲಿಸಿದ್ದಾರೆ ಎಂದು ರೈತರು ಆರೋಪಿಸಿದರು.
ಉದ್ದು, ಹೆಸರು, ತೊಗರಿ ಬೆಳೆ ಇರುವ ಜಾಗಗಳಲ್ಲಿ ಕಬ್ಬು ಬೆಳೆ ಎಂದು ತಪ್ಪಾಗಿ ದಾಖಲಿಸಿರುವುದರಿಂದ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಸರ್ಕಾರದ ಪರಿಹಾರ ದೊರೆಯದೆ ಅನ್ಯಾಯವಾಗಿದೆ. ಈ ಕುರಿತು ತಹಸೀಲ್ದಾರ್ ಹಾಗೂ ಸಹಾಯಕ ಆಯುಕ್ತರ ಗಮನಕ್ಕೆ ತಂದಿದ್ದರೂ ತಪ್ಪಿತಸ್ಥ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮಾ.15ರಂದು ತಹಸೀಲ್ದಾರ್ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀತಕುಮಾರ್ ಪಾಟೀಲ್, ತಾಲೂಕು ಉಪಾಧ್ಯಕ್ಷ ಸಂತೋಷ್ ಸೂರ್ಯವಂಶಿ, ಸಿದ್ದಪ್ಪ ಪಾಟೀಲ್, ಅನೀಲ್ ತಾಂಬುಳೆ, ಶಿವಶರಣಪ್ಪ ಪಾಟೀಲ್, ಕಾಶಿನಾಥ್ ಬಿರಾದಾರ್, ಬೋಜಪ್ಪ ಪಾಟೀಲ್ ಕಾದೇಪೂರ್, ಶಿವರುದ್ರಪ್ಪ ಎಂ. ತಾಟೆ, ದೇವಪ್ಪ ಹಲಂಗೆ ಹಾಗೂ ವೀರಶೆಟ್ಟಿ ಮೂಲಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹುಲಸೂರು ಹಾಗೂ ಬಸವಕಲ್ಯಾಣ ತಾಲೂಕುಗಳ ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ಹಾಗೂ ರೈತರು ಕಟ್ಟಿದ ವಿಮೆ ಸೌಲಭ್ಯ ದೊರೆಯುತ್ತಿಲ್ಲ. ಗ್ರಾಮ ಲೆಕ್ಕಾಧಿಕಾರಿಗಳ ಬೇಜವಾಬ್ದಾರಿ ಧೋರಣೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು.
-ಪ್ರಭು ಮೂಲಗೆ, ಜಿಲ್ಲಾ ಅಧ್ಯಕ್ಷರು, ಭಾರತೀಯ ಕಿಸಾನ್ ಸಂಘ.
ತಾಲೂಕಿನ ಹಲವಾರು ರೈತರ ಜಮೀನುಗಳಿಗೆ ಭೇಟಿ ನೀಡದೆ ತಪ್ಪು ವರದಿ ಸಲ್ಲಿಸಿರುವುದರಿಂದ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ದೊರೆಯಲಿಲ್ಲ. ನನ್ನ ಜಮೀನಿನಲ್ಲಿದ್ದ ಉದ್ದು ಮತ್ತು ಹೆಸರು ಬೆಳೆ ಇದ್ದರೂ ಕಬ್ಬು ಎಂದು ತಪ್ಪು ಮಾಹಿತಿ ನೀಡಲಾಗಿದೆ. ನನ್ನಂತೆಯೇ ಹಲವಾರು ರೈತರಿಗೆ ಅನ್ಯಾಯವಾಗಿದೆ. ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
- ಶರಣಪ್ಪ ಧನ್ನ, ತಾಲೂಕಾಧ್ಯಕ್ಷ, ಭಾರತೀಯ ಕಿಸಾನ್ ಸಂಘ.