ಔರಾದ್: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಹೇಳಿದರು.

ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ–ಜಿರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಯಾರೂ ಗುಳೆ ಹೋಗಬಾರದು. ತಮ್ಮೂರಿನಲ್ಲೇ ಉದ್ಯೋಗ ಪಡೆದು ಬದುಕು ಕಟ್ಟಿಕೊಳ್ಳಬೇಕು. ವಿಬಿ–ಜಿರಾಮ್‌ಜಿ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನಕ್ಕೆ 382 ರೂ. ಕೂಲಿ ನೀಡಲಾಗುತ್ತಿದ್ದು, 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ 47,750 ರೂ. ಕೂಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ನಂತರ ಕಂದಗೂಳ್ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲ ಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಸ್ಥರಿಗೆ ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಬೆಳವಣಿಗೆ ದಾಖಲಾತಿ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ವಡಗಾಂವ್, ಜಂಬಗಿ ಹಾಗೂ ಸಂತಪೂರದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಶಾಲೆಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಸಮರ್ಪಕವಾಗಿ ತಲುಪಿಸುವಲ್ಲಿ ಯಾವುದೇ ಲೋಪವಾಗಬಾರದು. ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಮಾರುತಿ ರಾಠೋಡ್, ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ಹಾಗೂ ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor