Aurad | ಅಲ್ಲಾಪುರ್ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಪೋಷಕರ ಆಗ್ರಹ
ಔರಾದ್ : ತಾಲೂಕಿನ ಅಲ್ಲಾಪುರ್ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರನ್ನು ತಕ್ಷಣ ವರ್ಗಾವಣೆ ಮಾಡಿ, ಅರ್ಹ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ, ಕಳೆದ 10 ವರ್ಷಗಳಿಂದ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶಾಲೆಯ ಸಮಯದಲ್ಲಿ ಮೊಬೈಲ್ ಫೋನ್ ವೀಕ್ಷಿಸುತ್ತಾ ಕಾಲ ಕಳೆಯುತ್ತಿದ್ದು, ಮಕ್ಕಳಿಗೆ ಸಮರ್ಪಕವಾಗಿ ಪಾಠ ಬೋಧನೆ ಮಾಡುತ್ತಿಲ್ಲ ಎಂದು ಪೋಷಕರು ದೂರಿದ್ದಾರೆ.
ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಧಕ್ಕೆಯಾಗುತ್ತಿದ್ದು, ಶಾಲೆ ಹಾಗೂ ಆವರಣದ ಸ್ವಚ್ಛತೆಯ ಬಗ್ಗೆಯೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುವ ಮೂಲಕ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಆರೋಪವನ್ನೂ ಮನವಿಯಲ್ಲಿ ಮಾಡಲಾಗಿದೆ.
ಆದ್ದರಿಂದ ಪ್ರಸ್ತುತ ಮುಖ್ಯ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಅರ್ಹ ಇಂಗ್ಲಿಷ್ ಶಿಕ್ಷಕರನ್ನು ಅಥವಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾಪಾಡಬೇಕು ಎಂದು ಪೋಷಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಕಾಶ್ ಕಾಂಬಳೆ, ಮಾರುತಿ ಜೂಲಂಡೆ, ರಾಜಕುಮಾರ್ ಮಚಕೂರೆ, ಧೋಂಡಿಬಾ ಪಾಟೀಲ್, ರಾಜಕುಮಾರ್ ಹಾಗೂ ಸಂಜುಕುಮಾರ್ ಮಚಕೂರೆ ಇದ್ದರು.