ಔರಾದ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸುಭಾಷ್ ಕಾಂಬಳೆ
ಔರಾದ್ : ಔರಾದ್ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಉಜನಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಉಜನಿ ಗ್ರಾಮದ ನಿವಾಸಿ ಸುಭಾಷ್ ಕಾಂಬಳೆ (42) ಎಂದು ಗುರುತಿಸಲಾಗಿದೆ.
ಸುಭಾಷ್ ಅವರು ಸಾಲ ಪಡೆದು ತಮ್ಮ ಹೊಲದಲ್ಲಿ ಬೆಳೆ ಬೆಳೆದಿದ್ದರು. ಆದರೆ ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಹೊಲದಲ್ಲಿದ್ದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಇದರಿಂದಾಗಿ ತೀವ್ರ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ರೈತರಿಗೆ ಉಜನಿ ಗ್ರಾಮದ ಪಿಕೆಪಿಎಸ್ನಲ್ಲಿ 50 ಸಾವಿರ ರೂ. ಸಾಲವಿದ್ದು, ಇತರೆ ಸಂಘ ಸಂಸ್ಥೆಗಳಲ್ಲಿ ಸುಮಾರು 2 ಲಕ್ಷ ರೂ. ಹಾಗೂ ಖಾಸಗಿ ಸಾಲವೂ ಇರುವುದಾಗಿ ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.